Updated By: Priyalachhi
ನವದೆಹಲಿ: ದೆಹಲಿಯಲ್ಲಿ ಉನ್ನಾವ್ ಅತ್ಯಾಚಾರ ಸಂತ್ರಸ್ತೆ ಮತ್ತು ಆಕೆಯ ತಾಯಿ ಮೇಲೆ ಪೊಲೀಸರು ದೌರ್ಜನ್ಯ ಎಸಗಿದ ಆರೋಪದ ನಂತರ ಭಾರತ ಕೇವಲ ಸತ್ತ ಆರ್ಥಿಕತೆಯಲ್ಲ, ಸತ್ತ ಸಮಾಜವೂ ಆಗುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಕಿಡಿ ಕಾರಿದ್ದಾರೆ.
ದೆಹಲಿ ಹೈಕೋರ್ಟ್, ಅತ್ಯಾಚಾರ ಪ್ರಕರಣದ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್ ಜೈಲು ಶಿಕ್ಷೆ ಅಮಾನತುಗೊಳಿಸಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಅತ್ಯಾಚಾರ ಸಂತ್ರಸ್ತೆ ಮೇಲೆ ದೌರ್ಜನ್ಯ ಮತ್ತು ಭಯವನ್ನುಂಟುಮಾಡುವ ಬದಲು ಗೌರವದಿಂದ ನಡೆಸಿಕೊಳ್ಳಬೇಕು ಮತ್ತು ನ್ಯಾಯವನ್ನು ಖಚಿತಪಡಿಸಿಕೊಳ್ಳಬೇಕು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
“ಸಾಮೂಹಿಕ ಅತ್ಯಾಚಾರ ಸಂತ್ರಸ್ತೆಯನ್ನು ಈ ರೀತಿ ನಡೆಸಿಕೊಳ್ಳುವುದು ಸೂಕ್ತವೇ? ನ್ಯಾಯಕ್ಕಾಗಿ ಧ್ವನಿ ಎತ್ತುವ ಧೈರ್ಯ ಹೊಂದಿರುವುದು ಆಕೆಯ ‘ತಪ್ಪೇ? ವಿಶೇಷವಾಗಿ ಸಂತ್ರಸ್ತೆ ಪದೇ ಪದೇ ಕಿರುಕುಳಕ್ಕೊಳಗಾಗುತ್ತಿರುವಾಗ ಮತ್ತು ಭಯದ ನೆರಳಿನಲ್ಲಿ ಬದುಕುತ್ತಿರುವಾಗ ಅಪರಾಧಿ(ಮಾಜಿ ಬಿಜೆಪಿ ಶಾಸಕ ಸೆಂಗಾರ್)ಯ ಶಿಕ್ಷೆ ಅಮಾನತುಗೊಳಿಸಿ, ಜಾಮೀನು ನೀಡಲಾಗಿದೆ ಎಂಬುದು ಅತ್ಯಂತ ನಿರಾಶಾದಾಯಕ ಮತ್ತು ನಾಚಿಕೆಗೇಡಿನ ಸಂಗತಿ” ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.



