Updated By: Priyalachhi
ಬೆಳಗಾವಿ: ನನ್ನ ಪ್ರಕಾರ ಹೈಕಮಾಂಡ್ ನನ್ನ ಪರವಾಗಿದೆ. ಅಧಿಕಾರ ಸ್ವೀಕಾರ ಸಂದರ್ಭದಲ್ಲಿ ಎರಡೂವರೆ ವರ್ಷ ಮುಖ್ಯಮಂತ್ರಿ ಅಂತಾ ತೀರ್ಮಾನ ಆಗಿಲ್ಲ. ಇವಾಗ ನಾನು ಮುಖ್ಯಮಂತ್ರಿ ಆಗಿದ್ದೇನೆ, ಮುಂದೆಯೂ ನಾನೇ ಇರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾಸಭೆಯಲ್ಲಿ ಪುನರುಚ್ಚರಿಸಿದರು.
ಉತ್ತರ ಕರ್ನಾಟಕ ಕುರಿತ ಚರ್ಚೆಯ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಉತ್ತರಿಸುವಾಗ ನಾಯಕತ್ವ ಬದಲಾವಣೆ ವಿಚಾರದಲ್ಲಿ ವಿಪಕ್ಷ ನಾಯಕ ಆರ್. ಅಶೋಕ್, ಸುನೀಲ್ ಕುಮಾರ್, ಮುನಿರತ್ನ ಸೇರಿದಂತೆ ಮತ್ತಿತರರು ಸಿದ್ದರಾಮಯ್ಯ ಅವರ ಕಾಲೆಳೆದರು. ಐದು ವರ್ಷ ನೀವೇ ಸಿಎಂ ಎಂದು ಘಂಟಾಘೋಷವಾಗಿ ಹೇಳಿ ನೋಡೋಣ ಎಂದು ಬಿಜೆಪಿ ನಾಯಕರು ಸಿದ್ದರಾಮಯ್ಯ ಅವರಿಗೆ ಸವಾಲೆಸೆದರು. ಈ ವೇಳೆ ಕೆಲಕಾಲ ಸ್ವಾರಸ್ಯಕರ ಚರ್ಚೆ ಆಯಿತು.
ಬಿಜೆಪಿ ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರುವುದಿಲ್ಲ- ಸಿಎಂ ತಿರುಗೇಟು: ಮುಖ್ಯಮಂತ್ರಿಗಳು ಮಾತನಾಡುತ್ತಿದ್ದಾಗ, ಬಿಜೆಪಿ ಶಾಸಕ ಸಿದ್ದು ಸವದಿ ಇನ್ಮುಂದೆ ರಾಜ್ಯದಲ್ಲಿ ಬಿಜೆಪಿಯೇ ಅಧಿಕಾರದಲ್ಲಿ ಇರಲಿದೆ ಎಂದರು. ಅದಕ್ಕೆ ನಿಮ್ಮ ಅಪ್ಪರಾಣೆಗೂ ಬರಲ್ಲ. ಕರ್ನಾಟಕದಲ್ಲಿ ಬಿಜೆಪಿ ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರುವುದಿಲ್ಲ ಎಂದು ಸಿಎಂ ತಿರುಗೇಟು ಕೊಟ್ಟರು.
ಆಗ ಮಧ್ಯಪ್ರವೇಶಿಸಿದ ಆರ್.ಅಶೋಕ, ಯಡಿಯೂರಪ್ಪ ಅವರಿಗೆ ಯಾವತ್ತೂ ನೀವು ಸಿಎಂ ಆಗಲ್ಲ ಎಂದು ಹೇಳುತ್ತಿದ್ದಿರಿ, ಆದರೆ, ನಾಲ್ಕು ಬಾರಿ ಸಿಎಂ ಆದರು ಎಂದರು. ಬಳಿಕ ಮಾತು ಮುಂದುವರಿಸಿದ ಸಿಎಂ ಸಿದ್ದರಾಮಯ್ಯ, ಅದಕ್ಕೆ ಯಡಿಯೂರಪ್ಪ ಅವರನ್ನು ಐದು ವರ್ಷ ಅಧಿಕಾರ ಪೂರ್ಣಗೊಳಿಸಲು ನೀವು ಬಿಡಲೇ ಇಲ್ಲ. 2008 ರಿಂದ ಮೂರು ಮಂದಿ ಮುಖ್ಯಮಂತ್ರಿ ಆದಿರಿ ಎಂದರು.
ಮತ್ತೆ ಸಿಎಂ ಮಾತಿನ ವೇಳೆ ಮಧ್ಯಪ್ರವೇಶಿಸಿದ ಆರ್ ಅಶೋಕ್, ಕಳೆದ ಬಾರಿ ಐದು ವರ್ಷ ಸಿಎಂ ಸ್ಥಾನ ಕೊಟ್ಟಿದ್ದರು. ಈ ಬಾರಿ ಅಧಿಕಾರ ಸ್ವೀಕಾರ ಸಂದರ್ಭದಲ್ಲಿ ಎರಡೂವರೆ ವರ್ಷ ಅಂತಾ ಬರೆದು ಕೊಟ್ಟಿದ್ದಾರೆ. ಒಮ್ಮೆ ಚೆಕ್ ಮಾಡಿ ನೋಡಿ ಎಂದರು.



