ಬಿಜೆಪಿ-ಜೆಡಿಎಸ್ ಮೈತ್ರಿ ಲೋಕಸಭೆ, ವಿಧಾನಸಭೆಗಷ್ಟೇ ಸೀಮಿತ: ದೇವೇಗೌಡ

0
36

Updated By: Priyalachhi

ಬೆಂಗಳೂರು: ಕರ್ನಾಟಕದಲ್ಲಿ ಲೋಕಸಭೆ, ವಿಧಾನಸಭೆಗಷ್ಟೇ ಬಿಜೆಪಿ-ಜೆಡಿಎಸ್ ಮೈತ್ರಿ ಆಗಿದೆ. ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಮಹಾನಗರ ಪಾಲಿಕೆ, ನಗರಪಾಲಿಕೆ, ನಗರಸಭೆ, ಪುರಸಭೆ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಏರ್ಪಟ್ಟಿಲ್ಲ, ಈ ಚುನಾವಣೆಗಳಲ್ಲಿ ಜೆಡಿಎಸ್ ಸ್ವತಂತ್ರವಾಗಿ ಸ್ಪರ್ಧೆ ಮಾಡಲಿದೆ ಎಂದು ಜಾತ್ಯಾತೀತ ಜನತಾದಳದ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ, ಹೆಚ್.ಡಿ.ದೇವೇಗೌಡ ತಿಳಿಸಿದರು.

ಜೆಡಿಎಸ್ ಕಚೇರಿಗೆ ಶುಕ್ರವಾರ ಭೇಟಿ ನೀಡಿದ್ದ ಸಂದರ್ಭದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ಉತ್ತಮ ಮೈತ್ರಿ ಆಗಿದೆ. ಅದು ವಿಧಾನಸಭೆ ಚುನಾವಣೆಯಲ್ಲಿ ಕೂಡ ಮುಂದುವರೆಯುತ್ತದೆ. ಆದರೆ ಪಕ್ಷವನ್ನು ಕಟ್ಟುವ ದೃಷ್ಟಿಯಿಂದ ಸ್ಥಳೀಯ ಸಂಸ್ಥೆಗಳ ಚುನಾವಣೆ ಬಹಳ ಮುಖ್ಯವಾಗಿದೆ. ಸ್ಥಳೀಯ ಸಂಸ್ಥೆ ಚುನಾವಣೆಯ ಸೀಟು ಹಂಚಿಕೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವ ಅಮಿತ್ ಶಾ ಅವರೊಂದಿಗೆ ಚರ್ಚೆ ನಡೆಸಲು ಆಗುತ್ತದೆಯೇ? ಜೆಡಿಎಸ್ ಸ್ವಂತ ಶಕ್ತಿ ಬಲದಿಂದ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಎದುರಿಸುತ್ತದೆ ಎಂದು ಸ್ಪಷ್ಟಪಡಿಸಿದರು.

ಜೆಡಿಎಸ್ ಮತ್ತು ಬಿಜೆಪಿ ನಡುವೆ ಸಂಬಂಧ ಉತ್ತಮವಾಗಿದೆ. ಹಾಗೆಯೇ, ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರೊಂದಿಗೂ ನಮ್ಮ ಬಾಂಧವ್ಯ ಉತ್ತಮವಾಗಿದೆ. ನಮ್ಮ ಶಕ್ತಿ ಎಲ್ಲೆಲ್ಲಿ ಇದೆಯೋ ಅಲ್ಲೆಲ್ಲಾ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಮತ್ತು ನಗರ ಪಾಲಿಕೆಗಳಲ್ಲಿ ಜೆಡಿಎಸ್ ಏಕಾಂಗಿಯಾಗಿ ಸ್ಪರ್ಧೆ ಮಾಡುತ್ತದೆೆ. ಈ ಸಂಬಂಧ ರಾಜ್ಯ ಬಿಜೆಪಿ ಅಧ್ಯಕ್ಷರು ನೀಡಿರುವ ಹೇಳಿಕೆ ತಪ್ಪು ಎಂದು ನಾನು ಹೇಳಲಾರೆ ಎಂದು ದೇವೇಗೌಡರು ಪ್ರತಿಕ್ರಿಯಿಸಿದರು.

ಪಕ್ಷದ ಸಂಘಟನೆಯ ಬಗ್ಗೆ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಜೊತೆ ಮಾತನಾಡಿದ್ದೇನೆ. ಹಾಸನದಲ್ಲಿ ಜನವರಿ 23ರಂದು ಹಾಗೂ ಬೆಂಗಳೂರಿನಲ್ಲಿ ಜನವರಿ 18ರಂದು ಸಭೆಗಳನ್ನು ಮಾಡಲಾಗುತ್ತದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್ ಪ್ರತ್ಯೇಕವಾಗಿ ಹೋರಾಟ ಮಾಡುತ್ತದೆ. ಮುಂದಿನ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಎನ್‌ಡಿಎ ಮೈತ್ರಿಕೂಟದಲ್ಲಿಯೇ ಇರುತ್ತೇವೆ. ಹಾಗೆಯೇ, ವಿಧಾನಪರಿಷತ್ 4 ಸ್ಥಾನಗಳ ಚುನಾವಣೆಯಲ್ಲಿ ಒಂದು ಸ್ಥಾನ ಜೆಡಿಎಸ್‌ಗೆ ಮತ್ತು 3 ಸ್ಥಾನ ಬಿಜೆಪಿಗೆ ಹಂಚಿಕೆಯಾಗುವ ಬಗ್ಗೆ ಪ್ರಾಥಮಿಕ ಮಟ್ಟದಲ್ಲಿ ಚರ್ಚೆ ಆಗಿದೆ ಎಂದು ದೇವೇಗೌಡರು ಸ್ಪಷ್ಟಪಡಿಸಿದರು.

sambrama prabha editor suresh kt

LEAVE A REPLY

Please enter your comment!
Please enter your name here