Updated By: Priyalachhi
ಬೆಂಗಳೂರು: ಮೆಕ್ಕೆಜೋಳ ಮತ್ತು ಹೆಸರುಕಾಳು ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ಸಿಎಂ ಸಿದ್ದರಾಮಯ್ಯ ಅವರು, ಮೆಕ್ಕೆಜೋಳ ಆಮದು ಮಾಡಿಕೊಳ್ಳುವುದನ್ನು ನಿಲ್ಲಿಸುವಂತೆ ಕೋರಿದ್ದಾರೆ.
ಪ್ರಧಾನಿಗೆ ಸಿಎಂ ಪತ್ರ: ಮೆಕ್ಕೆಜೋಳ, ಹೆಸರುಕಾಳು ಲಕ್ಷಾಂತರ ರೈತರ ಜೀವನಕ್ಕೆ ಆಧಾರವಾಗಿರುವ ಬೆಳೆಗಳಾಗಿವೆ. ಭಾರತ ಸರ್ಕಾರ ಘೋಷಿಸಿರುವ ಕನಿಷ್ಠ ಬೆಂಬಲ ಬೆಲೆಗಿಂತ (MSP) ಗಣನೀಯವಾಗಿ ಕಡಿಮೆಯಾದ ಮಾರುಕಟ್ಟೆ ಬೆಲೆಗಳು ರೈತರಲ್ಲಿ ದೊಡ್ಡ ಆತಂಕವನ್ನು ಸೃಷ್ಟಿಸಿವೆ. ಈ ಖಾರಿಫ್ ಋತುವಿನಲ್ಲಿ ಕರ್ನಾಟಕದಲ್ಲಿ 17.94 ಲಕ್ಷ ಹೆಕ್ಟೇರಿಗೂ ಅಧಿಕ ಪ್ರದೇಶದಲ್ಲಿ ಮೆಕ್ಕೆಜೋಳ ಹಾಗೂ 4.16 ಲಕ್ಷ ಹೆಕ್ಟೇರಿಗೂ ಹೆಚ್ಚು ಪ್ರದೇಶದಲ್ಲಿ ಹೆಸರುಕಾಳು ಬೆಳೆಯಲಾಗಿದ್ದು, ರಾಜ್ಯದಲ್ಲಿ ಸುಮಾರು 54.74 ಲಕ್ಷ ಮೆಟ್ರಿಕ್ ಟನ್ಗಿಂತ ಹೆಚ್ಚು ಮೆಕ್ಕೆಜೋಳ ಮತ್ತು ಹೆಸರುಕಾಳು 1.983 ಲಕ್ಷ ಮೆಟ್ರಿಕ್ ಟನ್ಗೂ ಹೆಚ್ಚು ಉತ್ಪಾದನೆಯಾಗುವ ನಿರೀಕ್ಷೆಯಿದೆ ಎಂದು ಪತ್ರದಲ್ಲಿ ಸಿಎಂ ವಿವರಿಸಿದ್ದಾರೆ.
ಇದು ಸಮೃದ್ಧಿಯ ಅವಕಾಶವಾಗಬೇಕಿತ್ತು, ಆದರೆ ಪ್ರಸ್ತುತ ಮಾರುಕಟ್ಟೆ ಸ್ಥಿತಿಯು ಇದನ್ನು ಸಂಕಷ್ಟವನ್ನಾಗಿ ಪರಿವರ್ತಿಸಿದೆ. ಕೇಂದ್ರ ಸರ್ಕಾರ ಮೆಕ್ಕೆಜೋಳಕ್ಕೆ ಪ್ರತಿ ಮೆಟ್ರಿಕ್ ಟನ್ಗೆ ₹2,400 ಹಾಗೂ ಹೆಸರುಕಾಳಿಗೆ ₹8,768 ಕನಿಷ್ಠ ಬೆಂಬಲ ಬೆಲೆ ಘೋಷಿಸಿದ್ದರೂ, ಕರ್ನಾಟಕದಲ್ಲಿ ಪ್ರಸ್ತುತ ಮಾರುಕಟ್ಟೆ ಬೆಲೆ ಜೋಳಕ್ಕೆ ₹1600-1800 ಮತ್ತು ಹೆಸರುಕಾಳಿಗೆ ₹5,400 ಆಸುಪಾಸಿನಲ್ಲಿರುವುದು ತೀವ್ರ ಮತ್ತು ಹಿಂದೆಂದೂ ಕಾಣದ ಬೆಲೆ ಕುಸಿತಕ್ಕೆ ಕಾರಣವಾಗಿದೆ. ಆಶ್ಚರ್ಯಕರ ಸಂಗತಿಯೆಂದರೆ, ಹಿಂದಿನ ಮೂರು ವರ್ಷಗಳ ಮಾದರಿ ಬೆಲೆಗಳು ಎಂಎಸ್ಪಿಗಿಂತ ಹೆಚ್ಚಿರುವಾಗ, ಈ ವರ್ಷ ಬಾಹ್ಯ ಒತ್ತಡಗಳ ಪರಿಣಾಮ ಮತ್ತು ಸರಬರಾಜು-ಬೇಡಿಕೆಗಳ ಅಸಮತೋಲನದಿಂದ ಬೆಲೆಗಳು ದಾಖಲೆಯ ಕನಿಷ್ಠ ಮಟ್ಟಕ್ಕೆ ಕುಸಿದಿವೆ. ಕರ್ನಾಟಕದಲ್ಲಿ ಸುಮಾರು 32 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳ ಮಾರುಕಟ್ಟೆಯಲ್ಲಿ ಹೆಚ್ಚುವರಿಯಾಗಿ ಲಭ್ಯವಿದ್ದು, ಸ್ಥಳೀಯ ಕೈಗಾರಿಕೆಗಳ ಬಳಕೆಯ ಸಾಮರ್ಥ್ಯಕ್ಕಿಂತ ಇದು ಹೆಚ್ಚಾಗಿದೆ. ಆದ್ದರಿಂದ ಭಾರತ ಸರ್ಕಾರವು ತಕ್ಷಣ ಮಧ್ಯಪ್ರವೇಶಿಸುವಂತೆ ಕೋರಿದ್ದಾರೆ.
NAFED, FCI ಮತ್ತು NCCF ಗೆ ತಕ್ಷಣ ಎಂಎಸ್ಪಿ ದರದಲ್ಲಿ ಖರೀದಿ ಆರಂಭಿಸಲು ನಿರ್ದೇಶನ ನೀಡಬೇಕು. ಕರ್ನಾಟಕದಲ್ಲಿ ಮೆಕ್ಕೆಜೋಳವನ್ನು PDS ವಿತರಣೆಯಲ್ಲಿ ಸೇರಿಸದಿರುವುದರಿಂದ, FCI, NAFED ಹಾಗೂ ಇತರ ಖರೀದಿ ಸಂಸ್ಥೆಗಳು ತಕ್ಷಣ ಬೆಲೆ ಬೆಂಬಲ ಯೋಜನೆ ಅಥವಾ ಸೂಕ್ತ ಮಾರುಕಟ್ಟೆ ಹಸ್ತಕ್ಷೇಪ ಯೋಜನೆಯಡಿ ಮೆಕ್ಕೆಜೋಳ ಮತ್ತು ಹೆಸರುಕಾಳನ್ನು ಎಂಎಸ್ಪಿ ದರದಲ್ಲಿ ಖರೀದಿಸಲು ಆದೇಶಿಸಬೇಕು ಎಂದು ಮನವಿ ಮಾಡಿದ್ದಾರೆ.
ಎಥೆನಾಲ್ ಪೂರೈಕೆಯ ಇಡಿ ವ್ಯವಸ್ಥೆಯಲ್ಲಿ ಕರ್ನಾಟಕದ ರೈತರ ನ್ಯಾಯಯುತ ಭಾಗವಹಿಸುವಿಕೆಯನ್ನು ಖಾತ್ರಿಪಡಿಸಿ. ಮೆಕ್ಕೆಜೋಳದಿಂದ ಉತ್ಪಾದಿತ ಎಥೆನಾಲ್ಗೆ ಮೂಲ ದರ ಲೀಟರ್ಗೆ ₹66.07 ಇದ್ದು, ಮೆಕ್ಕೆಜೋಳದಿಂದ ಪಡೆದ ಎಥೆನಾಲ್ಗೆ ಲೀಟರ್ಗೆ ₹5.79 (GST ಹೊರತುಪಡಿಸಿ) ಹೆಚ್ಚುವರಿ ಪ್ರೋತ್ಸಾಹಧನ ನೀಡಲಾಗುತ್ತಿದೆ. ಆದರೆ ಕರ್ನಾಟಕದ ಅನೇಕ ಎಥೆನಾಲ್ ಘಟಕಗಳು ರೈತರನ್ನು ಬಿಟ್ಟು ಮಧ್ಯವರ್ತಿಗಳಿಂದ ಮತ್ತು ವ್ಯಾಪಾರಿಗಳಿಂದ ಮೆಕ್ಕೆಜೋಳ ಖರೀದಿಸುತ್ತಿವೆ. ಇದು ಎಂಎಸ್ಪಿ ಮತ್ತು ಕೇಂದ್ರ ಸರ್ಕಾರದ ಪ್ರೋತ್ಸಾಹಧನ ಉದ್ದೇಶವನ್ನೇ ವಿಫಲಗೊಳಿಸುತ್ತದೆ. ಎಥೆನಾಲ್ ಘಟಕಗಳು ರೈತರಿಂದ ಅಥವಾ ರೈತ ಉತ್ಪಾದಕ ಸಂಘಗಳಿಂದ (FPO) ನೇರವಾಗಿ ಮೆಕ್ಕೆಜೋಳ ಖರೀದಿಸುವಂತೆ ಕೇಂದ್ರ ಸರ್ಕಾರವು ಆದೇಶಿಸಬೇಕು. ನೇರ ಖರೀದಿ ಖಾತ್ರಿಗೊಳ್ಳದಿದ್ದಲ್ಲಿ, ರೈತರಿಗೆ ಪ್ರೋತ್ಸಾಹಧನ ತಲುಪದಿದ್ದ ಪಕ್ಷದಲ್ಲಿ ಎಥೆನಾಲ್ ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಮರುಪರಿಶೀಲಿಸಬೇಕು ಎಂದು ಕೋರಿದ್ದಾರೆ.
ಎಥೆನಾಲ್ ಹಂಚಿಕೆ ಪ್ರಮಾಣವನ್ನು ಹೆಚ್ಚಿಸಿ: ಕರ್ನಾಟಕದಲ್ಲಿ ಮೆಕ್ಕೆಜೋಳದ ಉತ್ಪಾದನೆ ಗರಿಷ್ಠ ಪ್ರಮಾಣದಲ್ಲಿದ್ದು, ಸುಮಾರು 272 ಕೋಟಿ ಲೀ. ಡಿಸ್ಟಿಲರಿ ಸಾಮರ್ಥ್ಯ ಹೊಂದಿದೆ. ಹಾಗಾಗಿ ಎಥೆನಾಲ್ ಉತ್ಪಾದನೆಗೆ ಅಧಿಕ ಪ್ರಮಾಣದ ಮೆಕ್ಕೆಜೋಳದ ಉತ್ಪಾದನೆಯು ತಕ್ಕುದಾಗಿದೆ. 2025-26ರ ಎಥೆನಾಲ್ ಟೆಂಡರ್ ಹಂಚಿಕೆಯ ಪ್ರಕಾರ ತೈಲ ಉತ್ಪಾದಕ ಕಂಪನಿಗಳು 1,050 ಕೋಟಿ ಲೀಟರ್ ಎಥೆನಾಲ್ ಉತ್ಪಾದಿಸಲು ಟೆಂಡರ್ ನೀಡಿವೆ. ಈ ಪೈಕಿ 758.6 ಕೋಟಿ ಲೀ. (72.45%) ಧಾನ್ಯಗಳ ಆಧಾರಿತ ಎಥೆನಾಲ್ ಉತ್ಪಾದನೆಗೆ ಹಂಚಿಕೆಯಾಗಿದ್ದು, ಇದರಲ್ಲಿ ಮೆಕ್ಕೆಜೋಳ ಒಂದರಿಂದಲೇ 478 ಕೋಟಿ ಲೀ. ಎಥೆನಾಲ್ ಉತ್ಪಾದಿಸಬೇಕಿದೆ. ಕರ್ನಾಟಕದಲ್ಲಿರುವ 49 ಘಟಕಗಳಿಂದ 272 ಕೋಟಿ ಲೀ. ಎಥೆನಾಲ್ ಉತ್ಪಾದಿಸುವ ಸಾಮರ್ಥ್ಯವಿದ್ದರೂ ನಮ್ಮ ರಾಜ್ಯಕ್ಕೆ ಅತ್ಯಂತ ಕಡಿಮೆ ಹಂಚಿಕೆ ಮಾಡಲಾಗಿದೆ. ರಾಜ್ಯದ ಮೆಕ್ಕೆಜೋಳದ ಉತ್ಪಾದನಾ ಸಾಮರ್ಥ್ಯ ಹೆಚ್ಚಿದ್ದು, ನಮ್ಮ ಎಥೆನಾಲ್ ಉತ್ಪಾದನಾ ಸಾಮರ್ಥ್ಯಕ್ಕೆ ಹೋಲಿಸಿದರೆ ಅತ್ಯಂತ ಕನಿಷ್ಠ ಪ್ರಮಾಣವಾಗಿದೆ ಎಂದು ವಿವರಿಸಿದ್ದಾರೆ.



