ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ
ದಾವಣಗೆರೆ: ಗ್ಯಾರಂಟಿ ಯೋಜನೆಗಳಿಲ್ಲದಿದ್ದರೆ ಜನರು ಭಾರೀ ಸಂಕಷ್ಟ ಅನುಭವಿಸಬೇಕಾಗುತ್ತಿತ್ತು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಹೇಳಿದ್ದಾರೆ.
ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದಾವಣಗೆರೆಯಲ್ಲಿ ನಡೆದಿರುವ ಅಭಿವೃದ್ಧಿ ಕಾರ್ಯಗಳನ್ನು ಶ್ಲಾಘಿಸಿದರು. ಇಲ್ಲಿನ ಅಭಿವೃದ್ಧಿ ಬೆಂಗಳೂರಿನ ಮಟ್ಟಕ್ಕೆ ಸಮಾನವಾಗಿದೆ” ಎಂದು ಹೇಳಿದರು. ಇದೇ ವೇಳೆ ಮಾಜಿ ಸಚಿವ ಡಾ. ಶಾಮನೂರು ಶಿವಶಂಕರಪ್ಪ ಅವರ ದೂರದೃಷ್ಟಿಯನ್ನು ಕೊಂಡಾಡಿದರು.
“ಈ ಕ್ಷೇತ್ರದಲ್ಲಿ ಶೇ.98ರಷ್ಟೀು ಮಹಿಳೆಯರು ಗ್ಯಾರಂಟಿ ಯೋಜನೆಗಳ ಲಾಭ ಪಡೆಯುತ್ತಿದ್ದಾರೆ. ಸುಮಾರು 60,000 ಮಹಿಳೆಯರು ಗೃಹಲಕ್ಷ್ಮೀ ಯೋಜನೆಯ ಪ್ರಯೋಜನ ಪಡೆಯುತ್ತಿದ್ದಾರೆ. 61,000 ಕುಟುಂಬಗಳು ಗೃಹಜ್ಯೋತಿ ಯೋಜನೆಯಡಿ ಲಾಭ ಹೊಂದಿವೆ. ಅನ್ನಭಾಗ್ಯ ಯೋಜನೆಯಿಂದ 1.45 ಲಕ್ಷ ಜನರಿಗೆ ಸಹಾಯವಾಗಿದೆ ಎಂದು ವಿವರಿಸಿದರು.
ವಿರೋಧ ಪಕ್ಷಗಳು ಆರೋಪ ಮಾಡುತ್ತಿದ್ದರೂ ಮಹಿಳೆಯರು ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಹೇಳಿದರು.
ಇದೇ ವೇಳೆ ಶಾಮನೂರು ಶಿವಶಂಕರಪ್ಪ ಅವರ ಸೇವೆಯನ್ನು ಸ್ಮರಿಸಿದ ಡಿಕೆ.ಶಿವಕುಮಾರ್ ಅವರು, ಶಾಮನೂರು ಶಿವಶಂಕರಪ್ಪ ಅವರು ಆಸ್ಪತ್ರೆಗಳು, ಸಮುದಾಯ ಭವನಗಳು, ಶಿಕ್ಷಣ ಸಂಸ್ಥೆಗಳು ನಿರ್ಮಿಸಿ ಜನರಿಗೆ ಅಪಾರ ಸೇವೆ ಸಲ್ಲಿಸಿದ್ದಾರೆ. ವ್ಯಾಪಾರಿಗಳು ಕೂಡ ಅವರ ಆಡಳಿತದಲ್ಲಿ ಯಾವುದೇ ತೊಂದರೆ ಎದುರಿಸಿಲ್ಲ ಎಂದು ಹೇಳಿದ್ದಾರೆ ಎಂದು ತಿಳಿಸಿದರು.



