ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ
ಬೆಂಗಳೂರು: ಪಿಯುಸಿ ದ್ವಿತೀಯ ವರ್ಷದ ಫಲಿತಾಂಶ ಪ್ರಕಟವಾದ ಕೆಲವೇ ಗಂಟೆಗಳಲ್ಲೇ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ಹೆಬ್ಬಾಳದ ಮನೋರಾಯನಪಾಳ್ಯದಲ್ಲಿ ನಡೆದಿದೆ.
ಮೃತಳನ್ನು ತನುಶ್ರೀ (17) ಎಂದು ಗುರುತಿಸಲಾಗಿದೆ. ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯಾಗಿದ್ದ ಆಕೆ ಮೂರು ವಿಷಯಗಳಲ್ಲಿ ಅನುತ್ತೀರ್ಣರಾಗಿದ್ದಾಳೆ ಎಂಬುದು ತಿಳಿದುಬಂದಿದ್ದು, ಇದೇ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಘಟನೆ ಗುರುವಾರ ಮಧ್ಯಾಹ್ನ ಸುಮಾರು 3.30ರ ವೇಳೆಗೆ ನಡೆದಿದೆ. ಫಲಿತಾಂಶ ಪ್ರಕಟವಾದ ಬಳಿಕ ಮನೆಯಲ್ಲಿದ್ದ ವೇಳೆ ಆಕೆ ಆತ್ಮಹತ್ಯೆಗೆ ಶರಣಾಗಿದ್ದಾಳೆಂದು ತಿಳಿದುಬಂದಿದೆ.
ಘಟನೆಯ ಸಮಯದಲ್ಲಿ ಮನೆಯಲ್ಲಿ ಯಾರೂ ಇರಲಿಲ್ಲ. ತಾಯಿ ಕೆಲಸಕ್ಕೆ ತೆರಳಿದ್ದ ವೇಳೆ ಈ ಘಟನೆ ನಡೆದಿದೆ. ಘಟನೆ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲ. ಹಾಲ್ ಟಿಕೆಟ್ ಮಾತ್ರ ಹಾಸಿಗೆಯ ಮೇಲಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ತನಿಖಾಧಿಕಾರಿಗಳ ಪ್ರಾಥಮಿಕ ವಿಚಾರಣೆಯ ಪ್ರಕಾರ ಇದು ಸ್ಪಷ್ಟವಾದ ಆತ್ಮಹತ್ಯೆ ಪ್ರಕರಣವಾಗಿದ್ದು, ಫಲಿತಾಂಶದ ಬಳಿಕ ಉಂಟಾದ ಮಾನಸಿಕ ಒತ್ತಡವೇ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ವಿದ್ಯಾರ್ಥಿನಿ ಫಲಿತಾಂಶ ಕುರಿತು ತನ್ನ ಸ್ನೇಹಿತರೊಂದಿಗೆ ಮಾತನಾಡಿದ್ದಾಳೆ ಎಂಬ ಮಾಹಿತಿಯೂ ದೊರೆತಿದೆ.



