ಬಿಕ್ಲು ಶಿವು ಕೊಲೆ ಪ್ರಕರಣ: ಮಾಜಿ ಸಚಿವ ಭೈರತಿ ಬಸವರಾಜು ನಿರೀಕ್ಷಣಾ ಜಾಮೀನು ರದ್ದು!

0
43

Updated By: Priyalachhi

ಬೆಂಗಳೂರು: ಬಿಕ್ಲು ಶಿವಕುಮಾರ್​​​​ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ಭೈರತಿ ಬಸವರಾಜು ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ ತಡೆ (ಕೋಕಾ) ಕಾಯಿದೆ ವಿಧಿಸಿದ್ದ ಸರ್ಕಾರದ ಕ್ರಮವನ್ನು ರದ್ದುಪಡಿಸಿರುವ ಹೈಕೋರ್ಟ್, ಇದೇ ಆರೋಪ ಸಂಬಂಧ ದಾಖಲಾಗಿರುವ ಎಫ್ಐಆರ್ ರದ್ದುಪಡಿಸುವುದಕ್ಕೆ ನಿರಾಕರಿಸಿದೆ. ಜತೆಗೆ, ಪ್ರಕರಣ ಸಂಬಂಧ ಕೋರಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ.

ಈ ಆದೇಶದಿಂದ ಈ ಹಿಂದೆ ಮಂಜೂರಾಗಿದ್ದ ಮಧ್ಯಂತರ ನಿರೀಕ್ಷಣಾ ಜಾಮೀನು ರದ್ದಾದಂತಾಗಿದ್ದು, ಭೈರತಿ ಬಸವರಾಜು ಅವರಿಗೆ ಬಂಧನ ಭೀತಿ ಎದುರಾದಂತಾಗಿದೆ. ಬಿಕ್ಲು ಶಿವಕುಮಾರ್​ ಕೊಲೆ ಪ್ರಕರಣದಲ್ಲಿ ತಮ್ಮ ವಿರುದ್ದ ದಾಖಲಾಗಿದ್ದ ಕೋಕಾ ಕಾಯಿದೆ ಮತ್ತು ಎಫ್ಐಆರ್​ ರದ್ದು ಮಾಡುವುದು ಹಾಗೂ ನಿರೀಕ್ಷಣಾ ಜಾಮೀನು ಕೋರಿ ಭೈರತಿ ಬಸವರಾಜು ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನೀಲ್​​ ದತ್ತ ಯಾದವ್​​ ಅವರಿದ್ದ ನ್ಯಾಯಪೀಠ ಅರ್ಜಿಯನ್ನು ಭಾಗಶಃ ಪುರಸ್ಕರಿಸಿದೆ. ಕೋಕಾ ಕಾಯಿದೆ ರದ್ದುಮಾಡಿದ್ದು, ಇನ್ನುಳಿದ ಅರ್ಜಿಗಳನ್ನು ವಜಾಗೊಳಿಸಿ ಆದೇಶಿಸಿದೆ. ಕೋಕಾ ಕಾಯಿದೆ ಜಾರಿ ಮಾಡುವಲ್ಲಿ ಸರಿಯಾದ ಪ್ರಕ್ರಿಯೆಗಳನ್ನು ಅನುಸರಿಲ್ಲ. ಆದ್ದರಿಂದ ಕೋಕಾಯಿದೆ ರದ್ದುಮಾಡಲಾಗಿದೆ.

ಅಲ್ಲದೇ, ಘಟನೆ ಅತ್ಯಂತ ಹೀನಾಯ ಕೃತ್ಯವಾಗಿದ್ದು, ಪ್ರಕರಣದ ವಿಚಾರಣೆ ಮುಂದುವರೆಯುತ್ತಿದ್ದು ಪ್ರಕರಣ ರದ್ದುಪಡಿಸಲು ಸಾಧ್ಯವಿಲ್ಲ. ಹೀಗಾಗಿ ನಿರೀಕ್ಷಣಾ ಜಾಮೀನು ಕುರಿತಂತೆ ಮಧ್ಯಪ್ರವೇಶ ಮಾಡುವುದಿಲ್ಲ ಎಂದು ತಿಳಿಸಿದ ಪೀಠ, ನಿರೀಕ್ಷಣಾ ಜಾಮೀನು ಕೋರಿದ್ದ ಅರ್ಜಿಯನ್ನು ವಜಾಗೊಳಿಸಿರುವುದಾಗಿ ಎಂದು ಪೀಠ ಹೇಳಿದೆ.

ಪೀಠ ಆದೇಶ ಪ್ರಕಟಿಸುತ್ತಿದಂತೆ ಅರ್ಜಿದಾರರ ಪರ ವಕೀಲರು, ಇದೀಗ ಅರ್ಜಿದಾರರ ವಿರುದ್ಧದ ಕೋಕಾ ಕಾಯಿದೆ ರದ್ದಾಗಿದೆ. ಆದ ಕಾರಣ ಜಾಮೀನು ಕೋರಿ ವಿಚಾರಣಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವವರೆಗೂ ಈಗಾಗಲೇ ಮಂಜೂರಾಗಿರುವ ನಿರೀಕ್ಷಣಾ ಜಾಮೀನು ಮುಂದುವರೆಸುವುದಕ್ಕೆ ಅವಕಾಶ ನೀಡಬೇಕು ಎಂದು ಮನವಿ ಮಾಡಿದರು.

sambrama prabha editor suresh kt

LEAVE A REPLY

Please enter your comment!
Please enter your name here