Updated By: Priyalachhi
ಬೆಳಗಾವಿ: ಖಾತೆ ವಿಲೇವಾರಿಗೆ ತಂದಿದ್ದ ರೌಂಡ್ ರಾಬಿನ್ ಪದ್ಧತಿಯನ್ನು ರದ್ದು ಮಾಡಲಾಗಿದೆ. ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತೆ ಹಂಚಿಕೆಗೆ 6,450 ಅರ್ಜಿಗಳು ಮಾತ್ರ ಬಾಕಿಯಿರುವ ಕಾರಣಕ್ಕೆ ಹಳೆ ಪದ್ಧತಿಯಲ್ಲಿಯೇ ಅರ್ಜಿಗಳನ್ನು ವಿಲೇವಾರಿ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ವಿಧಾನಸಭೆ ಪ್ರಶ್ನೋತ್ತರ ಕಲಾಪದ ವೇಳೆ ಶಾಸಕ ಗೋಪಾಲಯ್ಯ ಅವರು ಜಿಬಿಎ ವ್ಯಾಪ್ತಿಯಲ್ಲಿ ಇ ಖಾತೆಗಳನ್ನು ನೀಡಲು ತಂದಿರುವ ರೌಂಡ್ ರಾಬಿನ್ ಪದ್ದತಿಯಿಂದ ಅನಾನುಕೂಲವಾಗುತ್ತಿರುವುದು ಗಮನಕ್ಕೆ ಬಂದಿದೆಯೇ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ಇ ಖಾತೆ ಯೋಜನೆಯಡಿ ಜಿಬಿಎ ವ್ಯಾಪ್ತಿಯಲ್ಲಿ ಒಟ್ಟು 43,382 ಅರ್ಜಿಗಳು ಸಲ್ಲಿಕೆಯಾಗಿದ್ದವು. ಇವುಗಳಲ್ಲಿ 31,274 ಅರ್ಜಿಗಳನ್ನು ವಿಲೇ ಮಾಡಲಾಗಿದೆ. 5,448 ಅರ್ಜಿಗಳನ್ನು ತಿರಸ್ಕರಿಸಲಾಗಿದೆ ಎಂದರು.
ಬೆಂಗಳೂರು ನಗರದ ಎರಡು ಕಡೆ ವೈಜ್ಞಾನಿಕ ಕಸ ವಿಲೇವಾರಿ ಘಟಕಗಳು ಜಿಬಿಎ ವ್ಯಾಪ್ತಿಯಲ್ಲಿ ಸಂಗ್ರಹವಾಗುವ ಕಸವನ್ನು ಸಂಸ್ಕರಿಸಲು ನಗರದ ಉತ್ತರ ಹಾಗೂ ದಕ್ಷಿಣ ದಿಕ್ಕುಗಳಲ್ಲಿ ಎರಡು ಘಟಕಗಳನ್ನು ಸ್ಥಾಪಿಸಲಾಗುವುದು. ಹೊಸ ತಂತ್ರಜ್ಞಾನದ ಮೂಲಕ ವೈಜ್ಞಾನಿಕವಾಗಿ ಕಸ ವಿಲೇವಾರಿ ಮಾಡಲಾಗುವುದು ಎಂದು ತಿಳಿಸಿದರು.
ದೊಡ್ಡಬಳ್ಳಾಪುರ ವ್ಯಾಪ್ತಿಯಲ್ಲಿ ಈ ಹಿಂದೆ ಮುಚ್ಚಿರುವ ಕಸ ಸಂಗ್ರಹಗಾರವನ್ನ ಸ್ಥಳಾಂತರಿಸಬೇಕು ಎನ್ನುವ ಶಾಸಕ ಧೀರಜ್ ಮುನಿರಾಜು ಅವರ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ ಅವರು, ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡಬೆಳವಂಗಲ ಹೋಬಳಿ, ಗುಂದಲಹಳ್ಳಿಯಲ್ಲಿ ಒಟ್ಟು 134.10 ಎಕರೆ ಹಾಗೂ ಬೆಂಗಳೂರು ದಕ್ಷಿಣ ತಾಲ್ಲೂಕಿನ ಉತ್ತರಹಳ್ಳಿ ಹೋಬಳಿಯ ಗೊಲ್ಲಹಳ್ಳಿಯಲ್ಲಿ 84.14 ಎಕರೆ ಹಾಗೂ 31.14 ಎಕರೆ ಪ್ರದೇಶವನ್ನು ನಿಗದಿಪಡಿಸಲಾಗಿದೆ ಎಂದು ಹೇಳಿದರು.



