Updated By: Priyalachhi
ಬೆಂಗಳೂರು : ಸರ್ಕಾರದ ಸ್ಪಷ್ಟ ನೀತಿಗಳು, ಸುಗಮ ಅನುಮತಿಗಳು, ಕೌಶಲ್ಯ, ಮೂಲಸೌಕರ್ಯ ಹಾಗೂ ಪೂರಕ ವಾತಾವರಣವು ಕರ್ನಾಟಕವನ್ನು ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆ ತಾಣವಾಗಿಸಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ, ಸಾಫ್ಟ್ ವೇರ್ ಟೆಕ್ನಾಲಜಿ ಪಾರ್ಕ್ಸ್ ಆಫ್ ಇಂಡಿಯಾ, ಬೆಂಗಳೂರು ಇವರ ವತಿಯಿಂದ ಆಯೋಜಿಸಲಾದ ‘ಬೆಂಗಳೂರು ಟೆಕ್ ಸಮ್ಮಿಟ್’ 28ನೇ ಆವೃತ್ತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಈ ಶೃಂಗಸಭೆಯಲ್ಲಿ ಕರ್ನಾಟಕ ಮಾಹಿತಿ ತಂತ್ರಜ್ಞಾನ ನೀತಿ 2025–2030, ಬಾಹ್ಯಾಕಾಶ ತಂತ್ರಜ್ಞಾನ ನೀತಿ 2025-2030, ಮತ್ತು ಸ್ಟಾರ್ಟ್ಅಪ್ ನೀತಿ 2025-2030 ಗಳಂತಹ ಮೂರು ಪ್ರಮುಖ ನೀತಿಗಳನ್ನು ರಚಿಸುವ ಮೂಲಕ ಐತಿಹಾಸಿಕ ಹೆಜ್ಜೆಯನ್ನು ಇಡಲಾಗಿದೆ. ದತ್ತಾಂಶ ಚಾಲಿತ ಹಾಗೂ ಆಧುನಿಕ ತಂತ್ರಜ್ಞಾನಕ್ಕೆ ಪೂರಕವಾದ ಕರ್ನಾಟಕ ಮಾಹಿತಿ ತಂತ್ರಜ್ಞಾನ ನೀತಿಯಿಂದ, ರಾಜ್ಯವನ್ನು ನಾವೀನ್ಯತೆ ಮತ್ತು ಡೀಪ್ ಟೆಕ್ಗಳಿಗೆ ಜಾಗತಿಕ ತಾಣವಾಗಿಸುವ ಗುರಿಯನ್ನು ಸರ್ಕಾರ ಹೊಂದಿದೆ ಎಂದರು.
2034ರ ವೇಳೆಗೆ ಕರ್ನಾಟಕವನ್ನು ಭಾರತದ ಪ್ರಮುಖ ಬಾಹ್ಯಾಕಾಶ ತಂತ್ರಜ್ಞಾನ ಕೇಂದ್ರವಾಗಿ ಪರಿವರ್ತಿಸುವ ನಮ್ಮ ಗುರಿಗೆ ಬಾಹ್ಯಾಕಾಶ ತಂತ್ರಜ್ಞಾನ ನೀತಿ 2025-30 ಸಹಕಾರಿಯಾಗಲಿದೆ. ಹೊಸ ಸ್ಟಾರ್ಟ್ಅಪ್ ನೀತಿಯಿಂದ ಮುಂದಿನ ಐದು ವರ್ಷಗಳಲ್ಲಿ ಬಂಡವಾಳ ನೆರವು, ಮಾರುಕಟ್ಟೆ ಅವಕಾಶ, ಮೂಲಸೌಲಭ್ಯ, ಕೌಶಲ್ಯಾಭಿವೃದ್ಧಿಯಂತಹ ಕ್ರಮಗಳ ಮೂಲಕ 25,000 ಸ್ಟಾರ್ಟ್ಅಪ್ಗಳ ಸ್ಥಾಪನೆಗೆ ನೆರವಾಗುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಸಿಎಂ ತಿಳಿಸಿದರು.
ಪರಿವರ್ತನೆಯ ಮನ್ವಂತರಕ್ಕೆ ವೇದಿಕೆ: ಬೆಂಗಳೂರು ತಂತ್ರಜ್ಞಾನ ಶೃಂಗಸಭೆಯು ಒಂದು ಸಮಾವೇಶಕ್ಕಿಂತಲೂ ಹೆಚ್ಚಾಗಿ ಹೊಸ ಹೊಸ ವಿಚಾರಗಳು, ಸಂವಾದಗಳು, ಬಂಡವಾಳ ಹೂಡಿಕೆ ಆವಿಷ್ಕಾರ ಮತ್ತು ಪರಿವರ್ತನೆಯ ಮನ್ವಂತರಕ್ಕೆ ವೇದಿಕೆಯಾಗಿದೆ. ಇಂದಿನಿಂದ ಮೂರು ದಿನಗಳ ಕಾಲ ನಡೆಯುವ ಈ ಸಮ್ಮೇಳನ ಹಲವು ಉತ್ತಮ ಅವಕಾಶಗಳಿಗೆ ಜಾಗತಿಕ ವೇದಿಕೆಯಾಗಿ ಹೊಸ ಮುನ್ನುಡಿ ಬರೆಯಲಿ ಎಂದು ಹಾರೈಸುತ್ತೇನೆ ಎಂದು ಹೇಳಿದರು.
ಬೆಂಗಳೂರು ತಂತ್ರಜ್ಞಾನ ಶೃಂಗಸಭೆ-2025 ಪರಿವರ್ತನೆಯ ಹರಿಕಾರ ಎಂಬುದನ್ನು ಈಗಾಗಲೇ ಹೇಳಿದ್ದೇನೆ. ಇದು ಶೈಕ್ಷಣಿಕ ವಲಯವನ್ನು ಉದ್ಯಮಕ್ಕೆ ಬೆಸೆಯುತ್ತದೆ. ನವೋದ್ಯಮಗಳನ್ನು ಹೂಡಿಕೆದಾರರಿಗೆ ಪರಿಚಯಿಸುತ್ತದೆ. ಅನ್ಯ ದೇಶಗಳ ಪರಿಣಿತರನ್ನು, ಸಂಶೋಧಕರನ್ನು, ನೀತಿ ನಿರೂಪಕರನ್ನು ಪರಸ್ಪರ ಬೆಸೆಯುವುದಲ್ಲದೇ, ಜಾಗತಿಕ ಮಾರುಕಟ್ಟೆಗಳನ್ನು ಸಂಪರ್ಕಿಸಲು ಬೃಹತ್ ವೇದಿಕೆಯಾಗಿದೆ ಎಂಬುದನ್ನು ಹೆಮ್ಮೆಯಿಂದ ಹೇಳುತ್ತೇನೆ ಎಂದರು.
ಭವಿಷ್ಯೀಕರಣಗೊಳ್ಳಿ ಎನ್ನುವ ಆಶಯದ ನುಡಿಯಂತೆ ತಂತ್ರಜ್ಞಾನವು ಸಾಮಾಜಿಕ ಒಳಿತನ್ನು, ಆರ್ಥಿಕ ನ್ಯಾಯವನ್ನು, ಸುಸ್ಥಿರ ಅಭಿವೃದ್ಧಿಯನ್ನು ಮತ್ತು ಸಮಾಜದ ಎಲ್ಲರಿಗೂ ಸಮೃದ್ಧಿಯನ್ನು ಒದಗಿಸಬೇಕು ಎಂಬ ನಮ್ಮ ನಂಬಿಕೆಯನ್ನು ನಾವು ಪುನರುಚ್ಚರಿಸುತ್ತೇವೆ. ಕೃತಕ ಬುದ್ಧಿಮತ್ತೆ, ಕ್ವಾಂಟಮ್, ಬಯೋಟೆಕ್, ಬಾಹ್ಯಾಕಾಶ ಮತ್ತು ಹಸಿರು ತಂತ್ರಜ್ಞಾನಗಳಿಂದ ಕೂಡಿರುವ ಡಿಜಿಟಲ್ ಯುಗದಲ್ಲಿ ನಾವು ನಿಂತಿದ್ದೇವೆ. ಬೆಂಗಳೂರು ತಂತ್ರಜ್ಞಾನ ಶೃಂಗಸಭೆ-2025 ದಿಟ್ಟ, ಮಾನವೀಯ ಮತ್ತು ಪರಿವರ್ತನಾತ್ಮಕ ಭವಿಷ್ಯವನ್ನು ಸಹ ಸೃಷ್ಟಿಸಲು ಇಡೀ ಜಗತ್ತಿಗೆ ಕರ್ನಾಟಕದ ಆಹ್ವಾನವಾಗಿದೆ ಎಂದು ತಿಳಿಸಿದರು.
ದಶಕಗಳಿಂದ, ಬೆಂಗಳೂರನ್ನು ಭಾರತದ ಸಿಲಿಕಾನ್ ವ್ಯಾಲಿ ಎಂದು ಕರೆಯಲಾಗುತ್ತಿದೆ. ಆದರೆ, ಇಂದು ಅದು ಇನ್ನೂ ದೊಡ್ಡದಾಗಿ, ನಾವೀನ್ಯತೆ, ಪ್ರತಿಭೆ, ಸಂಶೋಧನೆ ಮತ್ತು ತಾಂತ್ರಿಕ ನಾಯಕತ್ವದ ಮುಂಚೂಣಿಯಲ್ಲಿ ಜಾಗತಿಕ ಕೇಂದ್ರವಾಗಿ ಬೆಳೆದು ನಿಂತಿದೆ ಎಂಬುದನ್ನು ಹೇಳಲು ಹೆಮ್ಮೆಯಾಗುತ್ತದೆ. ತಂತ್ರಜ್ಞಾನ ಶಕ್ತಿ ಕೇಂದ್ರವಾಗಿ ಕರ್ನಾಟಕದ ಬೆಳವಣಿಗೆ ಆಕಸ್ಮಿಕವಲ್ಲ, ಇದು ದೂರದೃಷ್ಟಿಯ ನೀತಿಗಳು, ಆಳವಾದ ಸಾಂಸ್ಥಿಕ ಶಕ್ತಿ ಮತ್ತು ಪ್ರತಿ ಹಂತದಲ್ಲೂ ಸೃಜನಶೀಲತೆ ಮತ್ತು ಶ್ರೇಷ್ಠತೆಯನ್ನು ಪೋಷಿಸುವ ಪರಿಸರ ವ್ಯವಸ್ಥೆಯ ಪರಿಣಾಮವಾಗಿದೆ ಎಂದು ಸಿಎಂ ಹೇಳಿದರು.



