ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ
ಕರ್ನಾಟಕದ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸಲು ಮತ್ತು ಸರ್ಕಾರಿ ಶಾಲೆಗಳ ಅಸ್ತಿತ್ವವನ್ನು ಉಳಿಸಲು ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ (SDMC) ಸಮನ್ವಯ ವೇದಿಕೆಯು ರಾಜ್ಯ ಸರ್ಕಾರಕ್ಕೆ ಹಕ್ಕೊತ್ತಾಯ ಮಂಡಿಸಿದೆ. ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ರಾಜ್ಯ ಸಮಿತಿ ಸಭೆಯಲ್ಲಿ ಹಲವು ಕ್ರಾಂತಿಕಾರಿ ನಿರ್ಣಯಗಳನ್ನು ಕೈಗೊಳ್ಳಲಾಗಿದೆ.
ಸೋಮವಾರ(ಏ.6) ಸಭೆಯನ್ನು ಉದ್ಘಾಟಿಸಿ ಮಾತನಾಡಿದ ರಾಷ್ಟ್ರೀಯ ಕಾನೂನು ಶಾಲೆಯ ಪ್ರಾಧ್ಯಾಪಕ ಪ್ರೊ. ಬಾಬು ಮ್ಯಾಥ್ಯೂ, “ಪಂಚಾಯತ್ ಮಟ್ಟದಲ್ಲಿ ಸಮನ್ವಯ ವೇದಿಕೆಗಳು ಗಟ್ಟಿಯಾದಾಗ ಮಾತ್ರ ಸರ್ಕಾರಿ ಶಾಲೆಗಳನ್ನು ಸಬಲೀಕರಣಗೊಳಿಸಲು ಸಾಧ್ಯ. ಕಾರ್ಮಿಕ ಸಂಘಟನೆಗಳ ಮಾದರಿಯಲ್ಲಿ ಎಸ್ಡಿಎಂಸಿಗಳು ಒಗ್ಗೂಡಿ ಹೋರಾಡಬೇಕಿದೆ,” ಎಂದು ಕರೆ ನೀಡಿದರು.
ವೇದಿಕೆಯ ಪ್ರಮುಖ 15 ನಿರ್ಣಯಗಳೇನು ?
* ರಾಜ್ಯ ಸರ್ಕಾರವು ಪಂಚಾಯಿತಿಗೊಂದು ಕರ್ನಾಟಕ ಸಾರ್ವಜನಿಕ ಶಾಲೆಯನ್ನು ಪ್ರಾರಂಭಿಸುವ ನೆಪದಲ್ಲಿ 25, 683 ಶಾಲೆಗಳನ್ನು ಮುಚ್ಚುವ ಹುನ್ನಾರವನ್ನು ಸಮಿತಿ ಬಲವಾಗಿ ಖಂಡಿಸಿತು . ಕೂಡಲೇ ಸರ್ಕಾರಿ ಶಾಲೆ ಮುಚ್ಚುವ ಪ್ರಕ್ರಿಯೆಯನ್ನು ನಿಲ್ಲಿಸಬೇಕು .
* ರಾಜ್ಯ ಶಿಕ್ಷಣ ನೀತಿ ಆಯೋಗ ರೂಪಿಸಿರುವ ರಾಜ್ಯ ಶಿಕ್ಷಣ ನೀತಿಯನ್ನು ಜಾರಿಗೆ ತರಬೇಕು.
* ಉತ್ತಮ ಎಸ್ಡಿಎಂಸಿಗಳನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡುವ ಪ್ರಕ್ರಿಯೆ ಪಾರದರ್ಶಕ ಮತ್ತು ವಸ್ತುನಿಷ್ಠವಾಗಿರಬೇಕು. ಉತ್ತಮ ಪ್ರಶಸ್ತಿ ಪಡೆದ ಶಾಲೆಗಳ ಯಶೋಗಾಥೆಗಳ ಸಂಕಲವನ್ನು ಪ್ರಕಟಣೆ ರೂಪದಲ್ಲಿ ಹೊರ ತರಬೇಕು.
* ಶಿಕ್ಷಣ ಹಕ್ಕು ಕಾಯಿದೆ 2009 ನ್ನು ಪೂರ್ಣವಾಗಿ ಮತ್ತು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಕ್ರಿಯಾ ಯೋಜನೆ ರೂಪಿಸಬೇಕು.
* ಶಿಕ್ಷಣ ಹಕ್ಕು ಕಾಯಿದೆ ಅನ್ವಯ ಕನಿಷ್ಠ 8ನೇತರಗತಿಯವರೆಗೆ ಮಾತೃಭಾಷೆ ಕಲಿಕೆಯನ್ನು ಜಾರಿಗೊಳಿಸಬೇಕು.
* ಆಂಗ್ಲ ಭಾಷೆಯನ್ನು ಒಂದು ಭಾಷೆಯನ್ನಾಗಿ ಪ್ರಭುತ್ವದ ಮಟ್ಟಕ್ಕೆ ಕಲಿಸಲು ನುರಿತ ಆಂಗ್ಲ ಭಾಷಾ ಶಿಕ್ಷಕರನ್ನು ನೇಮಿಸಬೇಕು. ಅಗತ್ಯ ಸಂಪಂನ್ಮೂಲ ಮತ್ತು ತರಬೇತಿಯನ್ನು ನೀಡಬೇಕು.
* ರಾಜ್ಯದಲ್ಲಿ ತ್ರಿಭಾಷ ಸೂತ್ರದ ಬದಲು ದ್ವಿಭಾಷ ಸೂತ್ರವನ್ನು ಜಾರಿಗೊಳಿಸಬೇಕು.
* ಪದವಿ ಪೂರ್ವ ಶಿಕ್ಷಣದವರೆಗೆ ಸರ್ಕಾರಿ ಶಾಲೆ ಕಾಲೇಜಿನಲ್ಲಿ ಕಲಿತ ವಿದ್ಯಾರ್ಥಿಗಳಿಗೆ ಎಲ್ಲಾ ವೃತ್ತಿಪರ ಕೋರ್ಸ್ಗಳಲ್ಲಿ ಕನಿಷ್ಠ ಶೇ. 25 ರಷ್ಟು ಸೀಟುಗಳನ್ನು ಮೀಸಲಿಡಬೇಕು.



