Updated By: Priyalachhi
ನವದೆಹಲಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತ ಊಹಾಪೋಹಗಳ ನಡುವೆ ರಾಷ್ಟ್ರ ರಾಜಧಾನಿಯಲ್ಲಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಅಡ್ಡ ಗೋಡೆ ಮೇಲೆ ದೀಪ ಇಟ್ಟಂತೆ ಬುಧವಾರ ಮಾತನಾಡಿದ್ದಾರೆ.
ಸಿಎಂ ಬದಲಾವಣೆ ವದಂತಿಯನ್ನು ಅವರು ತಳ್ಳಿ ಹಾಕಿದ್ದು, ಮುಖ್ಯಮಂತ್ರಿ ಕುರ್ಚಿಗಾಗಿ ವಿವಾದವೇನೂ ಇಲ್ಲ. ಉಪ ಮುಖ್ಯಮಂತ್ರಿಯಾಗಿ ಮುಂದುವರಿಯಲು ನನಗೆ ತೃಪ್ತಿ ಇದೆ ಎಂದಿದ್ದಾರೆ.
ಕರ್ನಾಟಕ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಿವಕುಮಾರ್, ಆಂತರಿಕ ಭಿನ್ನಾಭಿಪ್ರಾಯಗಳು ಅಥವಾ ಕಾಂಗ್ರೆಸ್ ಹೈಕಮಾಂಡ್ ಜೊತೆಗೆ ಸಭೆ ಎಂಬಿತ್ಯಾದಿ ವದಂತಿಗಳು ಮಾಧ್ಯಮಗಳಲ್ಲಿ ಮಾತ್ರ ಬರುತ್ತಿದೆ. ನಾನು ಯಾವುದೇ ಎಐಸಿಸಿ ವರಿಷ್ಠರನ್ನೂ ಭೇಟಿ ಮಾಡುತ್ತಿಲ್ಲ. ಉಪ ಮುಖ್ಯಮಂತ್ರಿಯಾಗಿ ಮುಂದುವರಿಯಲು ನನಗೆ ಸಂತೋಷವಿದೆ.
ಪಕ್ಷದ ಕಾರ್ಯಕರ್ತನಾಗಿರಲು ಇಷ್ಟಪಡುತ್ತೇನೆ ಎಂದು ಹೇಳುವ ಮೂಲಕ ರಾಜ್ಯದಲ್ಲಿನ ಮುಖ್ಯಮಂತ್ರಿ ಬದಲಾವಣೆ ಅಥವಾ ಸಂಭಾವ್ಯ ನಾಯಕತ್ವ ಬದಲಾವಣೆಗೆ ಸಂಬಂಧಿಸಿದ ಪ್ರಶ್ನೆಗಳಿಗೆ ತೆರೆ ಎಳೆದರು.



