Updated By: Priyalachhi
ಬೆಂಗಳೂರು: ರಾಜ್ಯ ಸರ್ಕಾರ ಕೈಗೊಂಡಿರುವ ಉಪಕ್ರಮಗಳಿಂದ ತಾಯಂದಿರ ಮರಣ ಅನುಪಾತದಲ್ಲಿ ಶೇ.24ರಷ್ಟು ಕಡಿಮೆಯಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ವಿಕಾಸಸೌಧಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಳೆದ 2024ರ ಜನವರಿ ತಿಂಗಳಿನಿಂದ ಅಕ್ಟೋಬರ್ವರೆಗೆ ಒಟ್ಟು 483 ತಾಯಿ ಮರಣ ಪ್ರಕರಣಗಳು ದಾಖಲಾಗಿದ್ದರೆ, ಈ ವರ್ಷದಲ್ಲಿ ಜನವರಿಯಿಂದ ಅಕ್ಟೋಬರ್ವರೆಗೆ 366 ತಾಯಿ ಮರಣ ಪ್ರಕರಣಗಳು ದಾಖಲಾಗಿವೆ. ಆ ಮೂಲಕ ಶೇ.24ರಷ್ಟು ತಾಯಿ ಮರಣ ಪ್ರಕರಣ ಇಳಿಕೆಯಾಗಿದೆ ಎಂದು ವಿವರಿಸಿದರು.
ಪ್ರತಿ ತಾಲೂಕು ಆಸ್ಪತ್ರೆ ಮತ್ತು ಉತ್ತಮವಾಗಿ ಕಾರ್ಯನಿರ್ವಹಿಸುವ ಪ್ರತಿಯೊಂದು ಸಮುದಾಯ ಆರೋಗ್ಯ ಕೇಂದ್ರ (ಸಿಎಚ್ಸಿ)ಗಳು ದಿನದ 24 ಗಂಟೆಗಳು ಸಮಗ್ರ ತುರ್ತು ಪ್ರಸೂತಿ ಹಾಗೂ ನವಜಾತ ಶಿಶು ಆರೈಕೆ (ಸೀಮಾಂಕ್) ಸೇವೆಗಳನ್ನು ಒದಗಿಸಲಿದೆ. ನಮ್ಮ ತಜ್ಞ ವೈದ್ಯರನ್ನು ಹೆಚ್ಚು ಅಗತ್ಯವಿರುವ ಸ್ಥಳಗಳಲ್ಲಿ ಹೆಚ್ಚಿನ ಹೆರಿಗೆ ಹೊರೆ ಇರುವ ಆಸ್ಪತ್ರೆಗಳು ಮತ್ತು ತುರ್ತು ಆರೈಕೆ ಕೇಂದ್ರಗಳಲ್ಲಿ ಇರಿಸಲಾಗಿದೆ ಎಂದರು.
ಮುಂದಿನ ದಿನದಲ್ಲಿ ತಾಲೂಕು ಆಸ್ಪತ್ರೆಯಲ್ಲಿ ತಲಾ ಇಬ್ಬರು ಸ್ತ್ರಿರೋಗ ತಜ್ಞರು, ಮಕ್ಕಳ ತಜ್ಞರು ಮತ್ತು ಅರಿವಳಿಕೆ ತಜ್ಞರನ್ನು ಹಾಗೂ ಒಬ್ಬ ರೇಡಿಯಾಲಜಿಸ್ಟ್ ಇರಲಿದ್ದು, ದಿನದ 24 ಗಂಟೆಯೂ ಹೆರಿಗೆ ಸೌಲಭ್ಯ ಸಿಗಲಿದೆ. ಈ ಹಿನ್ನೆಲೆಯಲ್ಲಿ ತಿಂಗಳಿಗೆ 30ಕ್ಕಿಂತ ಕಡಿಮೆ ಹೆರಿಗೆಯಾಗುವ ಸಮುದಾಯ ಆರೋಗ್ಯ ಕೇಂದ್ರದ (ಸಿಎಚ್ಸಿ) ತಜ್ಞ ವೈದ್ಯರನ್ನು ಹಾಗೂ ಇಬ್ಬರು ಸ್ಟಾಫ್ ನರ್ಸ್ಗಳನ್ನು ತಾಲೂಕು ಆಸ್ಪತ್ರೆಗೆ ಸ್ಥಳಾಂತರಿಸಲಾಗುತ್ತದೆ ಎಂದು ತಿಳಿಸಿದರು.
30ಕ್ಕಿಂತ ಹೆಚ್ಚು ಹೆರಿಗೆಯಾಗುವ ಸಿಎಚ್ಸಿಗಳಲ್ಲಿ ತಲಾ ಒಬ್ಬ ಸ್ತ್ರೀರೋಗತಜ್ಞ, ಅರಿವಳಿಕೆ ಮತ್ತು ಮಕ್ಕಳ ತಜ್ಞರನ್ನು ಮುಂದುವರಿಸುತ್ತೇವೆ. ಸಮುದಾಯ ಆರೋಗ್ಯ ಕೇಂದ್ರದಲ್ಲಿನ ತಜ್ಞ ವೈದ್ಯರ ಸ್ಥಳಕ್ಕೆ ಇಬ್ಬರು ಎಂಬಿಬಿಎಸ್ ವೈದ್ಯರನ್ನು ಭರ್ತಿ ಮಾಡಲಾಗುತ್ತದೆ. ಸಹಜ ಹೇರಿಗೆಯನ್ನು ಸಮುದಾಯ ಆರೋಗ್ಯ ಕೇಂದ್ರದಲ್ಲಿಯೇ ಮಾಡಿಸಬಹುದಾಗಿದ್ದು, ಮಕ್ಕಳ ತಜ್ಞರನ್ನು ಮುಂದುವರಿಸಲಾಗುತ್ತದೆ ಎಂದು ವಿವರಿಸಿದರು.



