Updated By: Priyalachhi
ಬೆಂಗಳೂರು: ಪ್ರಸ್ತುತ ಚಾಲ್ತಿಯಲ್ಲಿರುವ ಕಾವೇರಿ 2.0 ತಂತ್ರಾಂಶ ಕಾನೂನು ಗೊಂದಲಗಳನ್ನು ಸೃಷ್ಟಿಸುತ್ತಿದೆ. ಹಾಗಾಗಿ ಅದರಲ್ಲಿ ‘ಮ್ಯುಟೇಷನ್ ಆಧಾರಿತ ಸಿವಿಲ್ ಕೋರ್ಟ್ ಡಿಕ್ರಿ’ ಎಂಬ ಹೊಸ ಕಾರ್ಯನಿರ್ವಹಣಾ ಶೀರ್ಷಿಕೆಯನ್ನು ಸೇರ್ಪಡೆ ಮಾಡಿ ಪರಿಷ್ಕರಣೆ ಮಾಡುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಸೆಷನ್ಸ್ ನ್ಯಾಯಾಲಯವು ಅಸಲು ದಾವೆಯಲ್ಲಿ ಅಂಗೀಕರಿಸಿದ ರಾಜಿ ಅಂತಿಮ ತೀರ್ಪಿನ ನಿಯಮಗಳ ಪ್ರಕಾರ ತಮ್ಮ ಹೆಸರಿಗೆ ಖಾತಾ ವರ್ಗಾವಣೆ ಮಾಡುವಂತೆ ಬಂಟ್ವಾಳ ತಾಲೂಕಿನ ತಹಶೀಲ್ದಾರ್ ಅವರಿಗೆ ನಿರ್ದೇಶನ ನೀಡುವಂತೆ ಕೋರಿ ಗಿಲ್ಬರ್ಟ್ ವಾಸ್ ಮತ್ತಿತರರು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದಂ ಅವರಿದ್ದ ಏಕ ಸದಸ್ಯ ಪೀಠ, ನೋಂದಣಿ ಮತ್ತು ಮುದ್ರಾಂಕ ಇಲಾಖೆ ಹಾಗೂ ಕಂದಾಯ ಇಲಾಖೆಗೆ ನಿರ್ದೇಶನ ನೀಡಿದೆ. ಅಲ್ಲದೇ, ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್ (ಸಿಎಸ್ಜಿ) ಸಹಯೋಗದೊಂದಿಗೆ ಈ ಕಾರ್ಯವನ್ನು ಮಾಡಬೇಕು ಎಂದು ನ್ಯಾಯಾಲಯ ಸೂಚನೆ ನೀಡಿದೆ.
‘ಕಾವೇರಿ 2.0 ಸದ್ಯ ಮಾರಾಟ, ಗಿಫ್ಟ್ ಡೀಡ್, ಅಡಮಾನ, ಪಿತ್ರಾರ್ಜಿತ ಆಸ್ತಿ ಕುರಿತ ವಹಿವಾಟುಗಳನ್ನು ಆಧರಿಸಿದೆ ಮತ್ತು ಅದರಲ್ಲಿ ಆಸ್ತಿ ವಿವಾದಗಳ ಕುರಿತಂತೆ ಸಿವಿಲ್ ನ್ಯಾಯಾಲಯಗಳ ತೀರ್ಪುಗಳನ್ನು ಪರಿಶೀಲಿಸಲು ಯಾವುದೇ ಅವಕಾಶವಿಲ್ಲ. ಜೊತೆಗೆ ಇದು ನಾಗರಿಕರು ನ್ಯಾಯಾಲಯಗಳು ನಿರ್ಣಾಯಕವಾಗಿ ನಿರ್ಧರಿಸಿದ ವಿಷಯಗಳಿಗೆ ಹಲವು ಅನುಮೋದನೆಗಳು, ಪರಿಶೀಲನೆಗಳು ಮತ್ತು ಪ್ರಮಾಣೀಕರಣಗಳನ್ನು ಪಡೆಯಬೇಕು ಎಂದು ಸೂಚಿಸುತ್ತದೆ. ಆದ್ದರಿಂದ ತಂತ್ರಾಂಶ ಸ್ವಲ್ಪ ಗೊಂದಲವನ್ನು ಉಂಟು ಮಾಡುತ್ತಿರುವುದರಿಂದ ಅದರ ಪರಿಷ್ಕರಣೆ ಅತ್ಯಗತ್ಯವಾಗಿದೆ ಎಂದು ಪೀಠ ತಿಳಿಸಿದೆ.



