Updated By: Priyalachhi
ಬೆಂಗಳೂರು: ರಾಜ್ಯದ ಪವರ್ ಫೈಟ್ ಸಂಬಂಧ ದೆಹಲಿಯ ಸೋನಿಯಾ ಗಾಂಧಿ ನಿವಾಸದಲ್ಲಿ ನಡೆಯುವ ಹೈ ಕಮಾಂಡ್ ಸಭೆಯಲ್ಲಿ ಚರ್ಚೆಗೆ ಬರಲಿದೆ ಎಂಬ ನಿರೀಕ್ಷೆ ಇತ್ತು. ಆದರೆ, ಈ ಸಭೆಯಲ್ಲಿ ರಾಜ್ಯ ರಾಜಕೀಯ ಚರ್ಚೆ ಬಗ್ಗೆ ನಿರೀಕ್ಷಿತ ಚರ್ಚೆ ಆಗಿಲ್ಲ. ಉಭಯ ನಾಯಕರ ಬ್ರೇಕ್ ಫಾಸ್ಟ್ ಸಭೆ ಮೂಲಕ ಹೈ ಕಮಾಂಡ್ ರಾಜ್ಯ ಪವರ್ ಫೈಟ್ಗೆ ತಾತ್ಕಾಲಿಕ ವಿರಾಮ ನೀಡಿದ್ದು, ರಾಜ್ಯ ರಾಜಕಾರಣದ ಬಗ್ಗೆ ದೆಹಲಿಯಲ್ಲಿ ನಡೆದ ಸಭೆಯಲ್ಲಿ ಯಾವುದೇ ತೀರ್ಮಾನ ಕೈಗೊಂಡಿಲ್ಲ.
ಸೋನಿಯಾ ಗಾಂಧಿ ಅವರ ದೆಹಲಿ ನಿವಾಸದಲ್ಲಿ ಭಾನುವಾರ ಸಂಜೆ ಮಹತ್ವದ ಸಭೆ ನಡೆಯಿತು. ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆ.ಸಿ.ವೇಣುಗೋಪಾಲ್ ಪಾಲ್ಗೊಂಡಿದ್ದ ಈ ಸಭೆಯಲ್ಲಿ ಪ್ರಮುಖವಾಗಿ ರಾಜ್ಯ ರಾಜಕೀಯದ ಬಗ್ಗೆ ಚರ್ಚೆಯಾಗಲಿದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ, ಸೋನಿಯಾ ಗಾಂಧಿ ನಿವಾಸದಲ್ಲಿ ನಡೆದ ಸಭೆಯಲ್ಲಿ ಸೋಮವಾರದಿಂದ ಆರಂಭವಾಗಲಿರುವ ಲೋಕಸಭೆ ಅಧಿವೇಶನದಲ್ಲಿ ಆಡಳಿತ ಪಕ್ಷವನ್ನು ಕಟ್ಟಿ ಹಾಕುವ ಬಗ್ಗೆ ಕಾರ್ಯತಂತ್ರ ರೂಪಿಸುವ ಕುರಿತ ಚರ್ಚೆಗೆ ಮಾತ್ರ ಸೀಮಿತವಾಗಿದೆ.
ರಾಜ್ಯ ಕಾಂಗ್ರೆಸ್ ಪಾಳಯದಲ್ಲಿನ ಪವರ್ ಫೈಟ್ ಬಗ್ಗೆ ಹೈ ಕಮಾಂಡ್ ಚರ್ಚೆ ನಡೆಸಿಲ್ಲ ಎಂದು ಹೇಳಲಾಗಿದೆ. ಸಭೆಯಲ್ಲಿ ರಾಜ್ಯ ರಾಜಕೀಯ ವಿದ್ಯಮಾನಗಳ ಬಗ್ಗೆಯೂ ಯಾವುದೇ ಮಹತ್ತರ ಚರ್ಚೆ ನಡೆದಿಲ್ಲ ಎಂದು ಹೇಳಲಾಗುತ್ತಿದೆ. ಈಗಾಗಲೇ ಹೈ ಕಮಾಂಡ್ ರಾಜ್ಯ ಪವರ್ ಫೈಟ್ ಮಧ್ಯೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ನಡುವೆ ಬ್ರೇಕ್ ಫಾಸ್ಟ್ ಮೀಟಿಂಗ್ ಮಾಡಿಸಿ ಪವರ್ ಫೈಟ್ ಕಿಚ್ಚಿಗೆ ಸದ್ಯಕ್ಕೆ ಬ್ರೇಕ್ ಹಾಕಿದೆ. ಉಭಯ ನಾಯಕರು ಜಂಟಿ ಸುದ್ದಿಗೋಷ್ಠಿ ನಡೆಸಿ ಒಗ್ಗಟ್ಟಿನ ಪ್ರದರ್ಶನ ಮಾಡಿದರು. ಯಾವುದೇ ಗೊಂದಲ ಉಂಟಾಗದಂತೆ ನಡೆದುಕೊಳ್ಳಲು ಪರಸ್ಪರ ಒಪ್ಪಿಕೊಂಡಿದ್ದಾರೆ. ಹಾಗಾಗಿ ಬೆಳಗಾವಿ ಅಧಿವೇಶನದವರೆಗೂ ರಾಜ್ಯದ ಪವರ್ ಫೈಟ್ಗೆ ಹೈ ಕಮಾಂಡ್ ತಾತ್ಕಾಲಿಕ ಅಲ್ಪ ವಿರಾಮ ಹಾಕಿದೆ.



