Updated By: Priyalachhi
ಬೆಂಗಳೂರು: ಪರಿಸರವನ್ನು ನಾವು ರಕ್ಷಿಸಿದರೆ ಅದು ನಮ್ಮನ್ನು ರಕ್ಷಿಸುತ್ತದೆ. ಅದಕ್ಕಾಗಿ ಪರಿಸರದ ಬಗ್ಗೆ ಜ್ಞಾನ ಅಗತ್ಯ. ಈ ಕುರಿತು ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಪ್ರತಿವರ್ಷ 3-5 ಕೋಟಿ ಸಸಿ ನೆಡುವ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದರು.
ಭಾನುವಾರ ಕರ್ನಾಟಕ ಚಿತ್ರಕಲಾ ಪರಿಷತ್ತು ವತಿಯಿಂದ ವಗರದ ಕುಮಾರ ಕೃಪಾ ರಸ್ತೆಯಲ್ಲಿರುವ ಕರ್ನಾಟಕ ಚಿತ್ರಕಲಾ ಪರಿಷತ್ತು ಆವರಣದಲ್ಲಿ ಆಯೋಜಿಸಲಾಗಿದ್ದ 23ನೇ ಚಿತ್ರಸಂತೆ ಕಾರ್ಯಕ್ರಮ ಉದ್ಘಾಟಿಸಿ ಮುಖ್ಯಮಂತ್ರಿಗಳು ಮಾತನಾಡಿದರು.
ಮುಖ್ಯಮಂತ್ರಿಯಾಗಿ 8ನೇ ಬಾರಿಗೆ ಚಿತ್ರ ಸಂತೆಯಲ್ಲಿ ಭಾಗವಹಿಸುತ್ತಿದ್ದೇನೆ ಎನ್ನುವುದು ಖುಷಿಯ ವಿಚಾರ. ಕಲಾವಿದರನ್ನು ಪ್ರೋತ್ಸಾಹಿಸುವುದು, ಅವರ ಚಿತ್ರಗಳ ಪ್ರದರ್ಶನ ಹಾಗೂ ಅವುಗಳ ಮಾರಾಟಕ್ಕೆ ವೇದಿಕೆ ಸೃಷ್ಟಿ ಮಾಡುವ ಕೆಲಸವನ್ನು ಚಿತ್ರಕಲಾ ಪರಿಷತ್ತು ಅರವತ್ತು ವರ್ಷಗಳಿಂದ ಮಾಡುತ್ತಾ ಬಂದಿದೆ. ಚಿತ್ರಸಂತೆ ತನ್ನ 23ನೇ ವರ್ಷಕ್ಕೆ ಕಾಲಿಟ್ಟಿದೆ. ಸುಮಾರು 22 ರಾಜ್ಯಗಳು, ನಾಲ್ಕು ಕೇಂದ್ರಾಡಳಿತ ಪ್ರದೇಶಗಳ ಕಲಾವಿದರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.
ಪ್ರತಿ ಜಿಲ್ಲೆಯಲ್ಲಿಯೂ ಸಾಧಕರ ವಸ್ತುಸಂಗ್ರಹಾಲಯಕ್ಕೆ ಬೇಡಿಕೆಯಿದ್ದು, ಸರ್ಕಾರ ಅದನ್ನು ಸಕಾರಾತ್ಮಕವಾಗಿ ಸ್ವೀಕಾರ ಮಾಡಲಿದೆ. ಈ ಬಾರಿಯ ಚಿತ್ರಸಂತೆಯ ಧ್ಯೇಯ ವಾಕ್ಯ ಪರಿಸರಕ್ಕೆ ಸಮರ್ಪಿಸಲಾಗಿದೆ. ಪರಿಸರವನ್ನು ನಾವು ರಕ್ಷಿಸಿದರೆ ಅದು ನಮ್ಮನ್ನು ರಕ್ಷಿಸುತ್ತದೆ. ಅದಕ್ಕಾಗಿ ಪರಿಸರದ ಬಗ್ಗೆ ಜ್ಞಾನ ಅಗತ್ಯ. ಈ ಕುರಿತು ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಬೆಂಗಳೂರು ಸೇರಿದಂತೆ ದೇಶದ ಅನೇಕ ರಾಜಧಾನಿಗಳಲ್ಲಿ ಪರಿಸರ ಮಾಲಿನ್ಯ ಹೆಚ್ಚಾಗಿದ್ದು, ದೆಹಲಿಯಲ್ಲಿ ಬದುಕಲು ಸಾಧ್ಯವಿಲ್ಲದ ವಾತಾವರಣ ನಿರ್ಮಾಣವಾಗುತ್ತಿದೆ. ಪರಿಸರದ ರಕ್ಷಣೆ ಇಂದಿನ ಅಗತ್ಯವಾಗಿದೆ ಎಂದು ಹೇಳಿದರು.



