ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ
ರಾಮನಗರ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಮತ್ತೆ ಚನ್ನಪಟ್ಟಣ ಕ್ಷೇತ್ರದಿಂದಲೇ ಸ್ಪರ್ಧಿಸಬೇಕೆಂದು ಕ್ಷೇತ್ರದ ಜೆಡಿಎಸ್ ಕಾರ್ಯಕರ್ತರು, ಮುಖಂಡರಿಂದ ಒತ್ತಾಯ ಮಾಡುತ್ತಿದ್ದು ಈ ಬಗ್ಗೆ ಕಾಲವೇ ತೀರ್ಮಾನ ಮಾಡಲಿದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.
ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, 2023ರ ಚುನಾವಣೆಯಲ್ಲಿ ಚನ್ನಪಟ್ಟಣದ ಜನರು ಕುಮಾರಣ್ಣನನ್ನು ಆಶೀರ್ವದಿಸಿ ಆಯ್ಕೆ ಮಾಡಿದ್ದರು. ಆದರೆ ಅನಿರೀಕ್ಷಿತ ರಾಜಕೀಯ ಬೆಳವಣಿಗೆಗಳಿಂದಾಗಿ ಅವರು ಸಂಸತ್ ಚುನಾವಣೆಯಲ್ಲಿ ಮಂಡ್ಯದಿಂದ ಸ್ಪರ್ಧಿಸಬೇಕಾಯಿತು.
ಈಗ ಕ್ಷೇತ್ರದ ಕಾರ್ಯಕರ್ತರು ಮತ್ತು ಮುಖಂಡರು ಕುಮಾರಣ್ಣ ಮತ್ತೆ ಚನ್ನಪಟ್ಟಣದಿಂದಲೇ ಸ್ಪರ್ಧಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ. ಇದು ಜನರ ಹಂಬಲ ಕೂಡ ಹೌದು. ಅವರು ಮತ್ತೆ ರಾಜ್ಯ ರಾಜಕಾರಣಕ್ಕೆ ಬಂದೇ ಬರುತ್ತಾರೆ, ಈ ಬಗ್ಗೆ ಕಾಲವೇ ನಿರ್ಧಾರ ಮಾಡಲಿದೆ’ ಎಂದು ತಿಳಿಸಿದರು.
2028ರ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟದ ಅಡಿಯಲ್ಲಿ ಯಾವ ಕ್ಷೇತ್ರ ಯಾರಿಗೆ ಎಂಬುದು ಅಂತಿಮವಾಗಲಿದೆ ಎಂದರು. ರಾಜ್ಯದ ಜನತೆ ಮತ್ತು ಪಕ್ಷದ ಕಾರ್ಯಕರ್ತರ ಮನಸ್ಸಿನಲ್ಲಿ ಕುಮಾರಸ್ವಾಮಿ ಅವರು ಮತ್ತೆ ಮುಖ್ಯಮಂತ್ರಿ ಆಗಬೇಕು ಎಂಬ ಬಲವಾದ ಅಭಿಲಾಷೆ ಇದೆ. ಈ ಕುರಿತು ಅಂತಿಮ ತೀರ್ಮಾನ ಎನ್ಡಿಎ ಮೈತ್ರಿಕೂಟದ ರಾಷ್ಟ್ರ ಮತ್ತು ರಾಜ್ಯ ನಾಯಕರು ತೆಗೆದುಕೊಳ್ಳುತ್ತಾರೆ ಎಂದು ಮಾಹಿತಿ ನೀಡಿದರು.



