Updated By: Priyalachhi
ಬೆಂಗಳೂರು: ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ಪಿಯುಸಿ ವಿದ್ಯಾರ್ಥಿಗಳಿಗೂ ವಿಸ್ತರಿಸುವುದಾಗಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಶುಕ್ರವಾರ ಭರವಸೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಶುಕ್ರವಾರ ಆಯೋಜಿಸಿದ್ದ ರಾಜ್ಯಮಟ್ಟದ ಮಕ್ಕಳ ದಿನಾಚರಣೆ ಹಾಗೂ ಪೋಷಕ–ಶಿಕ್ಷಕರ ಸಭೆಯಲ್ಲಿ ನಡೆದ ಸಂವಾದದಲ್ಲಿ ಬೆಳಗಾವಿ ಜಿಲ್ಲೆ ಬೈಲಹೊಂಗಲದ ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿ ರಾಕೇಶ್ ಪ್ರಶ್ನೆಗೆ ಉತ್ತರಿಸಿದ ಅವರು, ಪಿಯು ಕಾಲೇಜುಗಳಿಗೂ ಮಧ್ಯಾಹ್ನದ ಬಿಸಿಯೂಟ ಒದಗಿಸಬೇಕಿದ್ದರೆ ಬಜೆಟ್ನಲ್ಲೇ ಘೊಷಣೆ ಮಾಡಬೇಕು. ಈ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಹೇಳಿದರು.
ಮುಂದಿನ ಶೈಕ್ಷಣಿಕ ವರ್ಷದಿಂದ, ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಯ ಪಿಯುಸಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟವನ್ನು ಒದಗಿಸುತ್ತೇವೆ. ಆದಾಗ್ಯೂ, ಎಲ್ಲಾ ಸರ್ಕಾರಿ ಕಾಲೇಜುಗಳಲ್ಲಿ ಪಿಯುಸಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟವನ್ನು ಒದಗಿಸುವ ಬಗ್ಗೆ ನಾವು ಇನ್ನೂ ನಿರ್ಧರಿಸಿಲ್ಲ. ಈ ಬಗ್ಗೆ ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗುವುದು. ಅನುಮೋದನೆ ಸಿಕ್ಕಿದ್ದೇ ಆದರೆ, ಮುಂದಿನ ಶೈಕ್ಷಣಿಕ ವರ್ಷದಲ್ಲಿ ಯೋಜನೆ ವಿಸ್ತರಿಸಲಾಗುವುದು ಎಂದು ತಿಳಿಸಿದರು.
ಈ ಹಿಂದೆ, ಮಧ್ಯಾಹ್ನದ ಊಟವನ್ನು 8 ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿತ್ತು. ಈಗ ಅದನ್ನು 10ನೇ ತರಗತಿಯವರೆಗೆ ವಿಸ್ತರಿಸಲಾಗಿದೆ. ಇದಲ್ಲದೆ, ವಾರಕ್ಕೆ ಎರಡು ಬಾರಿ ಮೊಟ್ಟೆ ಮತ್ತು ಬಾಳೆಹಣ್ಣನ್ನು ನೀಡಲಾಗುತ್ತಿದೆ ಎಂದರು.



