Updated By: Priyalachhi
ನವದೆಹಲಿ: ದೆಹಲಿಯ ಐತಿಹಾಸಿಕ ಕೆಂಪುಕೋಟೆ ಬಳಿ ಸೋಮವಾರ ಸಂಜೆ ಕಾರು ಸ್ಫೋಟಗೊಂಡು 13ಕ್ಕೂ ಹೆಚ್ಚು ಜನ ಮೃತಪಟ್ಟಿದ್ದು, ದೇಶಾದ್ಯಂತ ತೀವ್ರ ಆತಂಕ ಸೃಷ್ಟಿಸಿದೆ.
ರಾಷ್ಟ್ರ ರಾಜಧಾನಿಯಲ್ಲಿ ಭೀಕರ ಸ್ಫೋಟ ಸಂಭವಿಸಿದ ನಂತರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ದೆಹಲಿ ಪೊಲೀಸ್ ಮುಖ್ಯಸ್ಥರು ಮತ್ತು ಗುಪ್ತಚರ ಬ್ಯೂರೋ ನಿರ್ದೇಶಕರೊಂದಿಗೆ ಮಾತನಾಡಿ ಪರಿಸ್ಥಿತಿಯನ್ನು ಅವಲೋಕಿಸಿದರು ಎಂದು ಮೂಲಗಳು ತಿಳಿಸಿವೆ.
ತನಿಖೆಗೆ ಸಹಾಯ ಮಾಡಲು ಮತ್ತು ಸಾಕ್ಷ್ಯಗಳನ್ನು ಸಂಗ್ರಹಿಸಲು ಸ್ಫೋಟ ನಡೆದ ಸ್ಥಳಕ್ಕೆ ತಜ್ಞ ತಂಡಗಳನ್ನು ಕಳುಹಿಸುವಂತೆ ರಾಷ್ಟ್ರೀಯ ಭದ್ರತಾ ಪಡೆ, ರಾಷ್ಟ್ರೀಯ ತನಿಖಾ ಸಂಸ್ಥೆ ಮತ್ತು ವಿಧಿವಿಜ್ಞಾನ ಮುಖ್ಯಸ್ಥರಿಗೆ ಅಮಿತ್ ಶಾ ನಿರ್ದೇಶನ ನೀಡಿದ್ದಾರೆ.
ಸ್ಫೋಟದ ನಂತರದ ಪರಿಸ್ಥಿತಿಯನ್ನು ಪರಿಶೀಲಿಸಲು ಗೃಹ ಸಚಿವರು ದೆಹಲಿ ಪೊಲೀಸ್ ಆಯುಕ್ತರು, ಗುಪ್ತಚರ ಬ್ಯೂರೋ ನಿರ್ದೇಶಕರು ಮತ್ತು ಕೇಂದ್ರ ಗೃಹ ಕಾರ್ಯದರ್ಶಿ ಅವರೊಂದಿಗೆ ಮಾತನಾಡಿದರು ಎಂದು ಮೂಲಗಳು ತಿಳಿಸಿವೆ.
ಘಟನೆಯ ಬಗ್ಗೆ ಮೂವರು ಉನ್ನತ ಅಧಿಕಾರಿಗಳು ಅವರಿಗೆ ಮಾಹಿತಿ ನೀಡಿದ್ದು, ಎನ್ಐಎ ಮತ್ತು ಎನ್ ಎಸ್ ಜಿಗೆ ತನಿಖೆಗೆ ಕೈಜೋಡಿಸುವಂತೆ ಅಮಿತ್ ಶಾ ಸೂಚಿಸಿದ್ದು, ಅಧಿಕಾರಿಗಳು ಸ್ಫೋಟದ ಸ್ಥಳಕ್ಕೆ ಧಾವಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಎನ್ಎಸ್ಜಿ ತಂಡವು ಸ್ಫೋಟಕ ತಜ್ಞರನ್ನು ಒಳಗೊಂಡಿದ್ದು, ಎನ್ಐಎ ತಂಡವು ಭಯೋತ್ಪಾದನಾ ಪ್ರಕರಣಗಳಲ್ಲಿ ಅನುಭವಿ ತನಿಖಾಧಿಕಾರಿಗಳನ್ನು ಒಳಗೊಂಡಿದೆ.



