Updated By: Priyalachhi
ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯ ಕೆಂಪು ಕೋಟೆ ಬಳಿ ಸಂಭವಿಸಿದ ಕಾರು ಸ್ಫೋಟದಲ್ಲಿ ಮೃತರ ಸಂಖ್ಯೆ 12ಕ್ಕೆ ಏರಿಕೆಯಾಗಿದ್ದು, ಈ ನಡುವೆ ಘಟನೆ ವೇಳೆ ಹುಂಡೈ ಐ20 ಕಾರನ್ನು ಚಲಾಯಿಸುತ್ತಿದ್ದ ವ್ಯಕ್ತಿ ಡಾ. ಉಮರ್ ಉನ್ ನಬಿ ಎನ್ನುವುದು ವಿಧಿವಿಜ್ಞಾನ ಪರೀಕ್ಷಾ ವರದಿಯಿಂದ ಬಹಿರಂಗಗೊಂಡಿದೆ.
ಡಾ. ಉಮರ್ ಅವರ ತಾಯಿಯ ಡಿಎನ್ಎ ಮಾದರಿಗಳು, ಸ್ಫೋಟದ ಸ್ಥಳದಿಂದ ವಶಪಡಿಸಿಕೊಂಡ ಮೂಳೆಗಳು ಮತ್ತು ಹಲ್ಲುಗಳಿಂದ ಹೊರತೆಗೆಯಲಾದ ಡಿಎನ್ಎ ಮಾದರಿಗಳೊಂದಿಗೆ ಹೊಲಿಕೆಯಾದ ಬಳಿಕ ಈ ವಿಷಯ ದೃಢಪಟ್ಟಿದೆ.
ಈ ಮಾದರಿಗಳನ್ನು ಏಮ್ಸ್ ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರು ವಿಶ್ಲೇಷಿಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಕಾರನ್ನು ಚಲಾಯಿಸಿದ ವ್ಯಕ್ತಿ ಉಮರ್ ಎಂದು ತನಿಖಾಧಿಕಾರಿಗಳು ಈ ಮೊದಲೇ ಶಂಕಿಸಿದ್ದರು. ಹೀಗಿದ್ದರೂ ಮುಂದೆ ಚಾರ್ಜ್ಶೀಟ್ ಸಲ್ಲಿಕೆ ಮಾಡುವಾಗ ಮೃತ ವ್ಯಕ್ತಿ ಉಮರ್ ಎನ್ನುವುದಕ್ಕೆ ವೈಜ್ಞಾನಿಕ ದಾಖಲೆಯ ಅಗತ್ಯವಿತ್ತು. ಉಮರ್ ಕುಟುಂಬಸ್ಥರ ಡಿಎನ್ಎ ಸಂಗ್ರಹಿಸಲಾಗಿತ್ತು.
ದೆಹಲಿ ಸ್ಫೋಟದ ಪ್ರಮುಖ ಶಂಕಿತ ಆರೋಪಿ ಉಮರ್ ನಬಿ ಶ್ರೀನಗರದಿಂದ ಎಂಬಿಬಿಎಸ್ ಮತ್ತು ಎಂಡಿ ಪದವಿಗಳನ್ನು ಪಡೆದು 2023ರಲ್ಲಿ ಕಾಶ್ಮೀರದ ಅನಂತ್ನಾಗ್ನಲ್ಲಿರುವ ಸರ್ಕಾರಿ ಆಸ್ಪತ್ರೆಯಲ್ಲಿ ಎಸ್ಆರ್ ಆಗಿ ಕೆಲಸ ಮಾಡುತ್ತಿದ್ದ.
ಪುಲ್ವಾಮಾದ ಕೊಯಿಲ್ ಗ್ರಾಮದ ಅವರ ಸಂಬಂಧಿಕರ ಪ್ರಕಾರ, ಡಾ. ಉಮರ್ ಶಾಂತ ಸ್ವಭವಾದ ವ್ಯಕ್ತಿ ಎನ್ನಲಾಗಿದ್ದು, ಅವನಿಗೆ ಓದೇ ಪ್ರಪಂಚವಾಗಿತ್ತು ಎಂದಿದ್ದಾರೆ. ಪೊಲೀಸ್ ಮೂಲಗಳು ಹೇಳುವ ಪ್ರಕಾರ, ಉಮರ್ ನ ಇತ್ತೀಚಿನ ನಡವಳಿಕೆಯಲ್ಲಿ ತುಂಬಾ ಬದಲಾವಣೆಯಾಗಿತ್ತು.



