Updated By: Priyalachhi
ಬೆಂಗಳೂರು: ಪ್ರತಿ ವರ್ಷ ಐವರು ಪರಿಸರವಾದಿಗಳಿಗೆ ಸಾಲು ಮರದ ತಿಮ್ಮಕ್ಕನವರ ಹೆಸರಿನಲ್ಲಿ ಪ್ರಶಸ್ತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಘೋಷಿಸಿದರು.
ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸ್ಥಾಪನೆಗೊಂಡು 50 ವರ್ಷಗಳು ತುಂಬಿರುವ ಅಂಗವಾಗಿ ಇಂದು ನಡೆದ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಮುಖ್ಯಮಂತ್ರಿ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಒಂದು ಕೋಟಿ ದತ್ತಿ ನಿಧಿಯನ್ನು ಸ್ಥಾಪಿಸಿ, ಠೇವಣಿ ಇರುವ ಹಣದ ಬಡ್ಡಿಯಲ್ಲಿ ಪ್ರತಿ ವರ್ಷವೂ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಹಾಗೂ ಕನಿಷ್ಠ ಐದು ಪರಿಸರವಾದಿಗಳಿಗೆ ತಿಮ್ಮಕ್ಕನವರ ಹೆಸರಿನಲ್ಲಿ ಪ್ರಶಸ್ತಿಯನ್ನು ಪ್ರತಿ ವರ್ಷ ಕೊಡಲಾಗುವುದು ಎಂದರು.
ಭೂಮಿಯ ಮೇಲಿನ ಜೀವಸಂಕುಲಕ್ಕೆ ಬದುಕಲು ಉತ್ತಮ ಪರಿಸರ ಅವಶ್ಯ. ಮಾಲಿನ್ಯ ರಹಿತ ಪರಿಸರವನ್ನು ನಿರ್ಮಿಸುವುದು ಅತ್ಯಂತ ಅವಶ್ಯವಾಗಿದೆ. ನಾವು ಉಸಿರಾಡುವ ಗಾಳಿ, ನೀರು ಹಾಗೂ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಅಗತ್ಯ. ಕೇಂದ್ರದ ವರದಿಯ ಪ್ರಕಾರ ದೇಶದ ಹಲವು ನಗರಗಳು ಮಾಲಿನ್ಯದಿಂದ ಕೂಡಿವೆ. ಈ ಪಟ್ಟಿಯಲ್ಲಿ ಬೆಂಗಳೂರು, ದಾವಣಗೆರೆ, ಕಲಬುರ್ಗಿ ನಗರವೂ ಸೇರಿರುವುದು ಆತಂಕಕಾರಿ ವಿಷಯ. ನಮ್ಮ ರಾಜ್ಯವನ್ನು ವಾಸಯೋಗ್ಯವಾಗಿಸಲು, ಜನರೆಲ್ಲರೂ ಪರಿಸರ ಬಗ್ಗೆ ಕಾಳಜಿಯನ್ನು ಬೆಳೆಸಿಕೊಳ್ಳಬೇಕು ಎಂದರು.
ಬೆಂಗಳೂರು ನಗರ ಒಂದರಲ್ಲೇ 900 ಟನ್ ಪ್ಲಾಸ್ಟಿಕ್ ಉತ್ಪಾದನೆಯಾಗುತ್ತದೆ. ಇದನ್ನು ಜನ ಅರ್ಥಮಾಡಿಕೊಳ್ಳದೇ ಹೋದರೆ ಪ್ಲಾಸ್ಟಿಕ್ ಮುಕ್ತ ನಗರವಾಗಲು ಸಾಧ್ಯವಿಲ್ಲ. ಪರಿಸರದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿ, ಸರ್ಕಾರದ ಜೊತೆ ಕೈಜೋಡಿಸಿದಾಗ ಮಾತ್ರ 2030ರ ಹೊತ್ತಿಗೆ ಬೆಂಗಳೂರನ್ನು ಪ್ಲಾಸ್ಟಿಕ್ ಮುಕ್ತ ನಗರವಾಗಿಸಲು ಸಾಧ್ಯ ಎಂದು ಹೇಳಿದರು.



