Updated By: Priyalachhi
ಬೆಂಗಳೂರು,ನ.೧೦-ಜೈಲಿನಲ್ಲಿರುವ ಕೈದಿಗಳು ಮೊಬೈಲ್, ಟಿವಿ ಇನ್ನಿತರ ಸೌಲಭ್ಯಗಳು ಸೇರಿದಂತೆ ಅಕ್ರಮವಾಗಿ ರಾಜಾತಿಥ್ಯ ಪಡೆಯುತ್ತಿರುವ ಸಂಬಂಧ ವಿಸ್ತೃತ ತನಿಖೆ ನಡೆಸಲು ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗಿದೆ.
ಕಾನೂನು ಸುವ್ಯವಸ್ಥೆ ವಿಭಾಗದ ಪೊಲೀಸ್ ಮಹಾನಿರ್ದೇಶಕ(ಎಡಿಜಿಪಿ) ಆರ್ ಹಿತೇಂದ್ರ ಅವರ ನೇತೃತ್ವದಲ್ಲಿ ಐಜಿಪಿ ಸಂದೀಪ್ ಪಾಟೀಲ್ ಎಸ್ ಪಿಗಳಾದ ಅಮರನಾಥ ರೆಡ್ಡಿ ಹಾಗೂ ರಿಷ್ಯಂತ್ ಅವರನ್ನು ಒಳಗೊಂಡ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗಿದೆ.
ಉನ್ನತ ಮಟ್ಟದ ಸಮಿತಿಯು ಅಕ್ರಮದ ಸಂಬಂಧ ತನಿಖೆ ನಡೆಸಿ ಒಂದು ತಿಂಗಳ ಒಳಗಾಗಿ ವರದಿ ನೀಡುವಂತೆ ಗಡುವು ನೀಡಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ವಿಕೃತಕಾಮಿ ಉಮೇಶ್ ರೆಡ್ಡಿ ಮೊಬೈಲ್ ಬಳಸುತ್ತಾ ಟಿವಿ ನೋಡುತ್ತಿರುವ, ಲಷ್ಕರ್ ಉಗ್ರ ಮೊಬೈಲ್ ಬಳಸುತ್ತಿರುವುದು ಹಾಗೂ ಕೆಲ ಕೈದಿಗಳು ವಿಶೇಷ ಅತಿಥ್ಯ ಪಡೆದಿರುವ ದೃಶ್ಯಗಳು ಬಹಿರಂಗಗೊಂಡ ಬೆನ್ನಲ್ಲೇ ನಗರದ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆಯ ಕಚೇರಿಯಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಎಂಎ ಸಲೀಂ ಒಳಗೊಂಡು ಹಿರಿಯ ಅಧಿಕಾರಿಗಳ ಸಭೆ ನಡೆಸಿದರು.
ಸುಮಾರು ನಾಲ್ಕು ಗಂಟೆಗಳಿಗೂ ಹೆಚ್ಚು ಕಾಲ ನಡೆದ ಸಭೆಯಲ್ಲಿ ಅಕ್ರಮಗಳ ಸಂಬಂಧಿಸಿದಂತೆ ಸುಧೀರ್ಘ ಸಮಾಲೋಚನೆ ನಡೆಸಿ ಉನ್ನತ ಮಟ್ಟದ ಸಮಿತಿಯನ್ನು ರಚಿಸಲು ತೀರ್ಮಾನ ಕೈಗೊಂಡಿದ್ದಾರೆ.



