SSLC ಯಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್

0
45

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ಬೆಂಗಳೂರು: ಇತ್ತೀಚೆಗೆ ಭಾರೀ ಸುದ್ದಿಯಲ್ಲಿರುವ ಕರ್ನಾಟಕ ಸರ್ಕಾರದ ನಿರ್ಧಾರ ಎಸ್‌ಎಸ್‌ಎಲ್‌ಸಿ (SSLC) ತೃತೀಯ ಭಾಷಾ ಪರೀಕ್ಷೆಯಲ್ಲಿ ಅಂಕಗಳ ಬದಲಿಗೆ ಗ್ರೇಡ್ ನೀಡುವ ತೀರ್ಮಾನ ವಿರುದ್ಧ ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯ ಕೊನೆಯ ಹಂತದಲ್ಲಿಯೇ ಈ ದಿಢೀರ್ ಆಗಿ ನಿರ್ಧಾರ ಘೋಷಿಸಿದ್ದು, ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಕರಿ ನೆರಳು ಬೀರಲಿದೆ ಎಂದು ಆರೋಪಿಸಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿದೆ.

ಬೆಂಗಳೂರಿನ ನಿವಾಸಿಗಳಾದ ಎಚ್.ಎನ್. ಚಂದನಾ ಮತ್ತು ಎಸ್. ವೆಂಕಟೇಶ್ ಸಲ್ಲಿಸಿರುವ ಈ ಅರ್ಜಿಯಲ್ಲಿ, ಸರ್ಕಾರದ ನಡೆಯನ್ನು ‘ಅಸಂವಿಧಾನಿಕ’ ಎಂದು ಆಕ್ಷೇಪಿಸಿದ್ದಾರೆ. ಯಾವುದೇ ಒಂದು ದೊಡ್ಡ ಶೈಕ್ಷಣಿಕ ಬದಲಾವಣೆ ಮಾಡುವ ಮುನ್ನ ಸಾರ್ವಜನಿಕರ ಅಥವಾ ಶಿಕ್ಷಣ ತಜ್ಞರ ಅಭಿಪ್ರಾಯ ಪಡೆಯುವುದು ಅತ್ಯಗತ್ಯ. ಆದರೆ, ಈ ವಿಷಯದಲ್ಲಿ ಸರ್ಕಾರ ಅಂತಹ ಯಾವುದೇ ಪ್ರಕ್ರಿಯೆ ನಡೆಸದೆ, ಸಚಿವ ಸಂಪುಟದ ಒಪ್ಪಿಗೆಯನ್ನೂ ಪಡೆಯದೆ ಏಕಪಕ್ಷೀಯವಾಗಿ ತೀರ್ಮಾನಿಸಿದೆ ಎಂಬುದು ಅರ್ಜಿದಾರರು ವಾದಿಸಿದ್ದಾರೆ.

ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಏನಿದೆ?

ವಿದ್ಯಾರ್ಥಿಗಳ ಗೊಂದಲ: ಪರೀಕ್ಷೆಗಳು ನಡೆಯುತ್ತಿರುವಾಗಲೇ ಸರ್ಕಾರ ದಿಢೀರ್ ಆಗಿ ಘೋಷಿಸಿರುವುದು ಲಕ್ಷಾಂತರ ವಿದ್ಯಾರ್ಥಿಗಳಲ್ಲಿ ಅತಂತ್ರ ಸ್ಥಿತಿ ನಿರ್ಮಿಸಿದೆ.

ಸಮಾನತೆಯ ಹಕ್ಕಿನ ಉಲ್ಲಂಘನೆ: ಸಂವಿಧಾನದ 14 ಮತ್ತು 21ನೇ ವಿಧಿಯಡಿ ನೀಡಲಾದ ಸಮಾನತೆ ಮತ್ತು ಶಿಕ್ಷಣದ ಹಕ್ಕಿಗೆ ಇದು ಚ್ಯುತಿ ತರುತ್ತದೆ.

ಅಧಿಕೃತ ಆದೇಶದ ಕೊರತೆ: ಸಚಿವರು ಕೇವಲ ಮೌಖಿಕವಾಗಿ ಹೇಳಿಕೆ ನೀಡಿದ್ದಾರೆಯೇ ಹೊರತು, ಈವರೆಗೆ ಯಾವುದೇ ಅಧಿಕೃತ ಗೆಜೆಟ್ ಅಧಿಸೂಚನೆ ಹೊರಬಂದಿಲ್ಲ. ಆದರೂ ಇದನ್ನು ಜಾರಿಗೆ ತರಲು ಹೊರಟಿರುವುದು ಕಾನೂನುಬಾಹಿರ.

ಸರ್ಕಾರದ ಹೊಸ ನಿಯಮ ಏನು?

ತೃತೀಯ ಭಾಷೆಯ (ಹಿಂದಿ/ಇತರ) ಅಂಕಗಳನ್ನು ಒಟ್ಟು ಫಲಿತಾಂಶಕ್ಕೆ ಪರಿಗಣಿಸುವುದಿಲ್ಲ. ಒಟ್ಟು 625 ಅಂಕಗಳ ಬದಲಿಗೆ ಕೇವಲ 525 ಅಂಕಗಳ ಆಧಾರದ ಮೇಲೆ ಶೇಕಡಾವಾರು ಲೆಕ್ಕ ಹಾಕಲಾಗುತ್ತದೆ. ತೃತೀಯ ಭಾಷೆಯಲ್ಲಿ ಕೇವಲ ಎ, ಬಿ, ಸಿ, ಡಿ ಗ್ರೇಡ್‌ಗಳನ್ನು ಮಾತ್ರ ನೀಡಲಾಗುತ್ತದೆ.

ರಾಜಕೀಯ ತಿರುವು

ಈಗಾಗಲೇ ಈ ವಿಷಯವು ಸರ್ಕಾರದ ಮಟ್ಟದಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಮಾತಿನ ಚಕಮಕಿ, ವಿವಾದಕ್ಕೆ ಕಾರಣವಾಗಿದೆ. ರಾಜ್ಯ ಸರ್ಕಾರವು ‘ಹಿಂದಿ ಹೇರಿಕೆ’ ತಡೆಯುವ ನೆಪದಲ್ಲಿ ತ್ರಿಭಾಷಾ ಸೂತ್ರಕ್ಕೆ ಎಳ್ಳುನೀರು ಬಿಟ್ಟು, ಪರೋಕ್ಷವಾಗಿ ದ್ವಿಭಾಷಾ ನೀತಿಯನ್ನು ಜಾರಿಗೊಳಿಸುತ್ತಿದೆ ಎಂದು ಬಿಜೆಪಿ ನಾಯಕರು ಟೀಕಿಸಿದ್ದಾರೆ. ಹಿಂದಿ ವಿಷಯದಲ್ಲಿ ಕಾಂಗ್ರೆಸ್ ಸರ್ಕಾರ ದೇಶದ್ರೋಹದ ಕೆಲಸ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಸ್ ಎಸ್ ಎಲ್ ಸಿ 3ನೇ ಭಾಷೆಯ ಅಂಕಗಳನ್ನು ರದ್ದುಗೊಳಿಸಿರುವ ನಿರ್ಧಾರದಿಂದ, ಉರ್ದು ಹಾಗೂ ಸಂಸ್ಕೃತವನ್ನು ಪ್ರಥಮ ಭಾಷೆಯಾಗಿ ಓದುವವರಿಗೆ 3ನೇ ಭಾಷೆಯಾದ ಕನ್ನಡಕ್ಕೆ ಮಹತ್ವ ಇಲ್ಲದಂತಾಗುವುದಿಲ್ಲವೇ ಎಂಬ ಪ್ರಶ್ನೆಯೂ ಉದ್ಭವಿಸಿದೆ. ಇದೀಗ ಹೈಕೋರ್ಟ್ ಯಾವ ರೀತಿ ನಿರ್ಧಾರ ಕೈಗೊಳ್ಳಲಿದೆ ಎಂದು ನೋಡಬೇಕಿದೆ.

sambrama prabha editor suresh kt

LEAVE A REPLY

Please enter your comment!
Please enter your name here