Updated By: Priyalachhi
ನಿನ್ನೆ ಸೋಮವಾರ ಸಂಜೆ ದೆಹಲಿಯ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿ ಹುಂಡೈ ಐ20 ಕಾರಿನಲ್ಲಿ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ ಒಂಬತ್ತು ಜನರು ಮೃತಪಟ್ಟು, ಸುಮಾರು 20 ಜನರು ಗಾಯಗೊಂಡಿದ್ದಾರೆ.
ಸ್ಫೋಟದ ಕಾರಣ ಇನ್ನೂ ತನಿಖೆ ಹಂತದಲ್ಲಿದೆ. ಯಾವುದೇ ಭಯೋತ್ಪಾದಕ ಚಟುವಟಿಕೆಗೆ ಸಂಬಂಧಿಸಿದೆಯೇ ಎಂದು ಅಧಿಕಾರಿಗಳು ಇನ್ನೂ ನಿರ್ಧರಿಸಿಲ್ಲ. ಘಟನೆಯ ಬಗ್ಗೆ ಭದ್ರತಾ ಸಂಸ್ಥೆಗಳು ತನಿಖೆ ಮುಂದುವರಿಸಿರುವುದರಿಂದ ಎಲ್ಲಾ ಸಂಭಾವ್ಯ ಕೋನಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಭಯೋತ್ಪಾದಕ ಕೃತ್ಯದ ಶಂಕೆ ವ್ಯಕ್ತಪಡಿಸಿ ತನಿಖಾಧಿಕಾರಿಗಳು ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ)ಯನ್ನು ಅನ್ವಯಿಸಿ ತನಿಖೆ ಮುಂದುವರಿಸಿದ್ದಾರೆ. ಸ್ಫೋಟದ ನಂತರ ದೆಹಲಿ ಮತ್ತು ಮುಂಬೈ,ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.
ಮುಸುಕುಧಾರಿ ವ್ಯಕ್ತಿ ಕಾರು ಡ್ರೈವಿಂಗ್
ಕೆಂಪು ಕೋಟೆ ಬಳಿ ಸ್ಫೋಟಕ್ಕೆ ನಿಮಿಷಗಳ ಮೊದಲು ಹುಂಡೈ ಐ20 ಕಾರನ್ನು ಮಾಸ್ಕ್ ಧರಿಸಿದ ವ್ಯಕ್ತಿ ಚಲಾಯಿಸುತ್ತಿರುವುದು ಕಂಡುಬಂದಿದೆ. ಘಟನೆಗೆ ಸಂಬಂಧಿಸಿದಂತೆ ಸಿಸಿಟಿವಿ ದೃಶ್ಯಾವಳಿ ಮೂಲಕ ಹೊಸ ಚಿತ್ರವೊಂದು ಹೊರಬಿದ್ದಿದ್ದು, ಸ್ಫೋಟ ಸಂಭವಿಸುವ ಕೆಲವೇ ನಿಮಿಷಗಳ ಮೊದಲು ಹುಂಡೈ ಐ20 ಕಾರನ್ನು ಚಾಲನೆ ಮಾಡುತ್ತಿದ್ದ ಮಾಸ್ಕ್ ಧರಿಸಿದ ವ್ಯಕ್ತಿಯನ್ನು ತೋರಿಸುತ್ತದೆ.
ಹೊಸ ದೃಶ್ಯಗಳು ಪಾರ್ಕಿಂಗ್ ಸ್ಥಳದಿಂದ ಬಂದಿದ್ದು, ಕಪ್ಪು ಮಾಸ್ಕ್ ಧರಿಸಿದ ವ್ಯಕ್ತಿ HR26CE7674 ನಂಬರ್ ಪ್ಲೇಟ್ನೊಂದಿಗೆ ಹುಂಡೈ ಐ20 ಕಾರು ಚಾಲನೆ ಮಾಡುತ್ತಿರುವುದನ್ನು ತೋರಿಸಲಾಗಿದೆ.



