Updated By: Priyalachhi
ಬೆಂಗಳೂರು: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಎಂ-ನರೇಗಾ)ಯ ಹೆಸರು ಮತ್ತು ಸ್ವರೂಪವನ್ನು ಬದಲಾಯಿಸಲು ಹೊರಟಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಬಡವರು ಮತ್ತು ಮಹಾತ್ಮ ಗಾಂಧೀಜಿ ಬಗೆಗಿನ ತಮ್ಮ ದ್ವೇಷವನ್ನು ತಾವೇ ಬಯಲು ಮಾಡಿಕೊಂಡಿದ್ದಾರೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು, ಇಪ್ಪತ್ತು ವರ್ಷಗಳ ಹಿಂದೆ ಯುಪಿಎ ಸರ್ಕಾರ ಜಾರಿಗೊಳಿಸಿದ್ದ ನರೇಗಾ ಯೋಜನೆ ಗ್ರಾಮೀಣ ಪ್ರದೇಶದಲ್ಲಿನ ನಿರುದ್ಯೋಗ ಮತ್ತು ಬಡತನ ನಿರ್ಮೂಲನೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಪ್ರತಿಯೊಬ್ಬ ವ್ಯಕ್ತಿಗೂ ಉದ್ಯೋಗದ ಹಕ್ಕನ್ನು ಖಾತರಿಗೊಳಿಸಿದ ಈ ಯೋಜನೆ ದೇಶ-ವಿದೇಶದ ಆರ್ಥಿಕ ತಜ್ಞರ ಶ್ಲಾಘನೆಯನ್ನು ಪಡೆದಿದೆ.
ನರೇಗಾವು ಉದ್ಯೋಗ ಖಾತರಿ ನೀಡುವ ಒಂದು ನೈಜ ಯೋಜನೆಯಾಗಿತ್ತು, ಆದರೆ ನರೇಂದ್ರ ಮೋದಿ ಅವರ ಸರ್ಕಾರದಡಿ ಪ್ರಸ್ತಾಪಿತ ಹೊಸ ರಚನೆಯು ಆ ಖಾತರಿಯನ್ನು ಕಸಿಯಲಿದೆ ಮತ್ತು ಉದ್ಯೋಗದ ಭರವಸೆಯನ್ನು ರಾಜಕೀಯ ನಾಯಕರ ಇಚ್ಛೆಗೆ ಬಿಟ್ಟುಬಿಡುತ್ತದೆ. ಇದು ಜಾತಿ ತಾರತಮ್ಯ ಮತ್ತು ಸಾಮಾಜಿಕ ಅಸಮಾನತೆಯನ್ನು ಇನ್ನಷ್ಟು ಆಳವಾಗಿಸಲಿದೆ ಎಂದು ಹೇಳಿದ್ದಾರೆ.
ಕೇಂದ್ರ ಸರ್ಕಾರವೇ ಸಂಪೂರ್ಣ ವೆಚ್ಚವನ್ನು ಭರಿಸುವ ನರೇಗಾ ಯೋಜನೆಯ ಸ್ವರೂಪವನ್ನೇ ಬದಲಾಯಿಸಿರುವ ಎನ್’ಡಿ ಎಸರ್ಕಾರ, ಯೋಜನೆಯ ಶೇಕಡಾ 40ರಷ್ಟು ವೆಚ್ಚವನ್ನು ರಾಜ್ಯ ಸರ್ಕಾಗಳ ತಲೆಗೆ ಕಟ್ಟಿರುವುದು ಪ್ರಧಾನಿ ನರೇಂದ್ರ ಮೋದಿಯವರು ಅಧಿಕಾರಕ್ಕೆ ಬಂದ ದಿನದಿಂದ ಅನುಸರಿಸಿಕೊಂಡು ಬರುತ್ತಿರುವ ಒಕ್ಕೂಟ ವಿರೋಧಿ ಧೋರಣೆಗೆ ಸಾಕ್ಷಿಯಾಗಿದೆ. ಈ ನಡೆಯಿಂದ ಬಡವರು ಕೆಲಸ ಹುಡುಕಿಕೊಂಡು ವಲಸೆ ಹೋಗುವುದು ಹೆಚ್ಚಾಗಲಿದೆ. ಏಕೆಂದರೆ ಪ್ರಸ್ತಾಪಿತ ರೂಪದಲ್ಲಿ ಸ್ವಂತ ಸ್ಥಳದಲ್ಲಿ ಉದ್ಯೋಗ ಖಾತರಿಯಿಲ್ಲ, ಜೀವನ ನಿರ್ವಹಣೆಗಾಗಿ ಕುಟುಂಬಗಳು ದೂರದ ಪ್ರದೇಶಗಳಿಗೆ ಪ್ರಯಾಣ ಮಾಡಬೇಕಾಗಲಿದೆ ಎಂದು ತಿಳಿಸಿದ್ದಾರೆ.
ಗ್ರಾಮಸ್ವರಾಜ್ಯದ ಕನಸನ್ನು ಬಿತ್ತಿಹೋಗಿದ್ದ ಮಹಾತ್ಮ ಗಾಂಧೀಜಿಯವರ ಹೆಸರನ್ನು ಈ ಯೋಜನೆಗೆ ಇಟ್ಟಿರುವುದು ಅರ್ಥಪೂರ್ಣವಾದ ನಿರ್ಧಾರವಾಗಿತ್ತು. ವಿದೇಶದಲ್ಲಿ ಸುತ್ತಾಡುವಾಗ ಗಾಂಧಿ ಭಜನೆ ಮಾಡುವ ಪ್ರಧಾನಿ ನರೇಂದ್ರ ಮೋದಿಯವರು ದೇಶದಲ್ಲಿ ಮಾತ್ರ ಗಾಂಧೀಜಿ ಹೆಸರನ್ನು ಅಳಿಸಿಹಾಕುವ ಹುನ್ನಾರಗಳನ್ನು ನಡೆಸುತ್ತಲೇ ಇದ್ದಾರೆ. ಗಾಂಧೀಜಿಯವರ ಹಂತಕ ಗೋಡ್ಸೆಯನ್ನು ಮೆರೆಸಲು ಹೊರಟಿರುವ ಪರಿವಾರದಿಂದ ಇದಕ್ಕಿಂತ ಬೇರೆಯಾದುದನ್ನು ಹೇಗೆ ನಿರೀಕ್ಷಿಸಲು ಸಾಧ್ಯ.



